ಪ್ರಜಾಸ್ತ್ರ ಸುದ್ದಿ
ದೇವದುರ್ಗ(Devadurga): ತಾಲೂಕಿನ ಕರಿಗುಡ್ಡ ಸಮೀಪ ಸಾರಿಗೆ ಬಸ್ ಮತ್ತು ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗರ್ಭಿಣಿ ಮಹಿಳೆ ಸೇರಿ ಇಬ್ಬರು ಮೃತಪಟ್ಟಿದ್ದು, 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಯಚೂರಿನ ತಿಂಥಣಿ ಬ್ರಿಡ್ಜ್ ಯಿಂದ ದೇವದುರ್ಗಕ್ಕೆ ಬರುತ್ತಿದ್ದ ಸಾರಿಗೆ ಬಸ್, ಆಟೋಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇನ್ನು ದೇವದುರ್ಗ ಪಟ್ಟಣದ ಕಡೆ ಬರುತ್ತಿದ್ದ ಟಂಟಂ ವಾಹನ ಕರಿಗುಡ್ಡ ತಿರುವಿನಲ್ಲಿ ಬಸ್ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಆಟೋದಲ್ಲಿದ್ದ ಗರ್ಭಿಣಿ ಮೋನಮ್ಮ (25) ಹಾಗೂ ಮಲ್ಲಪ್ಪ (50) ಗಂಭೀರವಾಗಿ ಗಾಯಗೊಂಡರು. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ.
ಮೃತ ಮೋನಮ್ಮಸಿರವಾರ ತಾಲೂಕಿಗೆ ಮದುವೆ ಮಾಡಿಕೊಟ್ಟಿದ್ದು ಹೆರಿಗೆ ಎಂದು ತವರು ಮನೆ ಕರಿಗುಡ್ಡ ಗ್ರಾಮಕ್ಕೆ ಬಂದಿದ್ದರು. ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದ ಅವರು ಸ್ಕ್ಯಾನಿಂಗ್ ತಪಾಸಣೆಗೆ ಕುಟುಂಬಸ್ಥರೊಂದಿಗೆ ದೇವದುರ್ಗಕ್ಕೆ ಬರುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಹೊಟ್ಟೆಗೆ ಬಲವಾದ ಪೆಟ್ಟು ಬಿದ್ದ ಪರಿಣಾಮ ಗರ್ಭದಲ್ಲಿದ್ದ ಮಗು ಕೂಡ ಮೃತಪಟ್ಟಿದೆ. ಮೊದಲು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನೊಬ್ಬ ವ್ಯಕ್ತಿ ದುರಗಪ್ಪಗೆ ಕೈ-ಕಾಲಿಗೆ ಗಂಭೀರ ಪೆಟ್ಟಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಗೆ ಶಾಸಕಿ, ಹೆಚ್ಚುವರಿ ಎಸ್ಪಿ ಭೇಟಿ: ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಶಾಸಕಿ ಕರೆಮ್ಮ ಜಿ. ನಾಯಕ ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಬಗ್ಗೆ ದೂರವಾಣಿ ಮೂಲಕ ವೈದ್ಯರನ್ನು ಸಂಪರ್ಕಿಸಿ ಮಾಹಿತಿ ಪಡೆದರು. ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಸ್ಥಿತಿ ಕುರಿತು ಮಾಹಿತಿ ಸಂಗ್ರಹಿಸಿದರು. ಘಟನೆ ಕುರಿತು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




