ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಕಾರಿನ ಟೈರ್ ಸ್ಫೋಟಗೊಂಡು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 9 ವರ್ಷದ ಬಾಲಕ ಮೃತಪಟ್ಟ ಘಟನೆ ಧಾರವಾಡ-ರಾಮನಗರ ಹೆದ್ದಾರಿಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಅಕ್ಷಯ್ ಎಂಬುವರ 9 ವರ್ಷದ ಮಗ ಹಿಯಾಂಶ್ ಮೃತಪಟ್ಟಿದ್ದಾನೆ. ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.
ಬೆಂಗಳೂರು ಮೂಲದ ಅಕ್ಷಯ್ ಎಂಬುವರು ಕಿಯಾ ಕಾರಿನಲ್ಲಿ ಅಳ್ನಾವರದಿಂದ ರಾಮನಗರದ ಕಡೆಗೆ ತೆರಳುತ್ತಿದ್ದಾಗ ಜಿಲ್ಲೆಯ ಖಾನಾಪುರ ತಾಲೂಕಿನ ಧಾರವಾಡ-ರಾಮನಗರ ಹೆದ್ದಾರಿಯಲ್ಲಿ ಅಪಘಾತವಾಗಿದೆ. ಅತಿವೇಗವಾಗಿ ಚಲಿಸುತ್ತಿದ್ದ ಕಾರಿನ ಬಲಭಾಗದ ಟೈರ್ ಸ್ಫೋಟಗೊಂಡು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ವೇಗವಾಗಿ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು, ಒಳಗೆ ಕುಳಿತಿದ್ದವರಿಗೆ ಗಂಭೀರ ಗಾಯಗಳಾಗಿವೆ. ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಂದಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.




