ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ 195ನೇ ಜನ್ಮದಿನದ ಅಂಗವಾಗಿ ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳಾ ಸಾಧಕಿಯರಿಗೆ “ಅಕ್ಷರದ್ವ ಸಾವಿತ್ರಿಬಾಯಿ ಫುಲೆ ರಾಜ್ಯ ಪ್ರಶಸ್ತಿ” ಪ್ರದಾನ ಸಮಾರಂಭ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ರಾಜ್ಯ ಸಮಿತಿ ವತಿಯಿಂದ ಶನಿವಾರ ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್ತಿನ ಸ್ಥಾಪಕ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ, 16 ವರ್ಷದಿಂದ ಸಾವಿತ್ರಿಬಾಯಿ ಫುಲೆ ಅವರ ಹೆಸರಿನ ಪ್ರಶಸ್ತಿ ನೀಡುತ್ತಾ ಬಂದಿದ್ದೇವೆ. ಸಾವಿತ್ರಿಬಾಯಿ ಫುಲೆ ಅವರ ಹೆಸರಿನ ಪ್ರಶಸ್ತಿ ಸ್ವೀಕರಿಸುವುದು ಗೌರವದ ಜೊತೆಗೆ ದೊಡ್ಡ ಜವಾಬ್ದಾರಿಯೂ ಆಗಿದೆ. ಫುಲೆಯವರ ಜನ್ಮದಿನದ ನೆಪದಲ್ಲಿ ಅವರ ವಿಚಾರಧಾರೆ, ಹೋರಾಟ ಮತ್ತು ಸಾಮಾಜಿಕ ಕೊಡುಗೆಗಳನ್ನು ಸ್ಮರಿಸುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಮಹೇಶ್ ಪೋದ್ದಾರ ಹಾಗೂ ಪಾಲಿಕೆ ಸದಸ್ಯೆ ಆರತಿ ಶಹಾಪುರ ಮಾತನಾಡಿ, ಮಹಿಳಾ ಶಿಕ್ಷಣವೇ ಸಮಾಜದ ಬದಲಾವಣೆಗೆ ಮೂಲ ಎಂದು ಹೇಳಿದರು. ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ವಿಜಯಾ ಕೋರಿಶೆಟ್ಟಿ ಮಾತನಾಡಿ, ಹೆಣ್ಣು ಶಿಕ್ಷಣ ಕಲಿಯುವುದೇ ಅಂದು ದೊಡ್ಡ ಸವಾಲಾಗಿದ್ದ ಸಂದರ್ಭದಲ್ಲಿ ಸಾವಿತ್ರಿಬಾಯಿ ಫುಲೆ ಅವರು ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡಿ ವಿಧವೆಯರಿಗೆ ಶಿಕ್ಷಣ ನೀಡಿ ಶಿಕ್ಷಕರನ್ನಾಗಿ ರೂಪಿಸಿದರು. ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ನೀಡಿ ಆಶ್ರಯ ನೀಡಿದ ಅವರ ಕಾರ್ಯ ಸಮಾಜ ಪರಿವರ್ತನೆಯ ಮಹತ್ತರ ಹೆಜ್ಜೆಯಾಗಿದೆ ಎಂದರು.
ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, 21ನೇ ಶತಮಾನದಲ್ಲಿ ‘ಜೈ ಜವಾನ್, ಜೈ ಕಿಸಾನ್’ ಜೊತೆಗೆ ‘ಜೈ ಶಿಕ್ಷಕ’ ಎಂಬ ಘೋಷವನ್ನೂ ಸೇರಿಸಬೇಕು. ದೇಶ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಅಮೂಲ್ಯವಾಗಿದೆ. ವ್ಯಕ್ತಿತ್ವ ನಿರ್ಮಾಣ ಮತ್ತು ಸಮಾಜ ಪರಿವರ್ತನೆಯ ಶಕ್ತಿ ಶಿಕ್ಷಕರ ಕೈಯಲ್ಲಿದೆ ಎಂದರು. ವಿಶೇಷ ಸನ್ಮಾನಿತ ಡಿವೈಎಸ್ಪಿ ಬಸವರಾಜ ಯಲಿಗಾರ ಅವರು ಮಾತನಾಡಿ, ಶತಮಾನಗಳಿಂದ ದಮನಕ್ಕೊಳಗಾದ ದಲಿತರು, ಮಹಿಳೆಯರು ಮತ್ತು ಹಿಂದುಳಿದ ವರ್ಗಗಳ ಉನ್ನತಿಗಾಗಿ ಶ್ರಮಿಸಿದವರು ಸಾವಿತ್ರಿಬಾಯಿ ಹಾಗೂ ಜ್ಯೋತಿಬಾ ಫುಲೆ. ಅವರ ವಿಚಾರಗಳು ಇಂದು ಕೂಡ ಪ್ರಸ್ತುತವಾಗಿವೆ ಎಂದರು. ಫುಲೆ ದಂಪತಿಗಳು ಬೀಜವಾದರೆ, ಡಾ.ಬಾಬಾಸಾಹೇಬ್ ಅಂಬೇಡ್ಕರ್ ವೃಕ್ಷ. ನಾವು ಅದರ ಫಲಾನುಭವಿಗಳು ಎಂದು ಹೇಳಿದರು.
ಡಾ.ಬಸವರಾಜ ಜಾಲವಾದಿ, ಎಸ್.ಬಿ ವಿಸ್ಡಮ್ ಕೇರಿಯರ್ ಅಕಾಡೆಮಿಯ ಶರಣಯ್ಯ ಭಂಡಾರಿಮಠ ಮಾತನಾಡಿದರು. ಈ ವೇಳೆ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ, ಜಿಲ್ಲಾ ಸಂಚಾಲಕ ಅಕ್ಷಯಕುಮಾರ ಅಜಮನಿ, ಉಪಾಧ್ಯಕ್ಷ ಮಹಾದೇವ ಚಲವಾದಿ, ಯಶೋದಾ ಕಾಂಬಳೆ, ಪ್ರೆಮಾ ಕೊಳಿ, ಲತಾ ರಾಠೋಡ ಅಲ್ಲದೇ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ದಲಿತ ವಿದ್ಯಾರ್ಥಿ ಪರಿಷತ್ತಿನ ರಾಜ್ಯ ಮತ್ತು ಜಿಲ್ಲಾ ಮುಖಂಡರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.




