ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ಕೇಂದ್ರ ಸರ್ಕಾರ 2024-25ನೇ ಸಾಲಿನ ಬಜೆಟ್(Budget) ಅನ್ನು ಮಂಗಳವಾರ ಮಂಡಿಸಿತು. ವಿತ್ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಿದರು. ಈ ಬಗ್ಗೆ ಸಿಂದಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಶೋಕ ಮನಗೂಳಿ ಮಾತನಾಡಿದ್ದು, ಇದೊಂದು ತಾರತಮ್ಯ ನೀತಿಯ ಬಜೆಟ್ ಎಂದು ಟೀಕಿಸಿದ್ದಾರೆ.
ಬಿಜೆಪಿ ಪಕ್ಷಕ್ಕೆ ಕೈ ಜೋಡಿಸಿದ ಪಕ್ಷಗಳ ರಾಜ್ಯಗಳಿಗೆ ಹೆಚ್ಚು ಹೆಚ್ಚು ವಿಶೇಷ ಪ್ಯಾಕೇಜ್ ಗಳನ್ನು ನೀಡುವ ಮೂಲಕ ಆಯಾ ರಾಜ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಅನುದಾನ ಘೋಷಣೆ ಮಾಡಿದೆ. ಆದರೆ, ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನುದಾನ ವಿಚಾರದಲ್ಲಿ ಸಂಪೂರ್ಣವಾಗಿ ಕಡೆಗಣಿಸಿದ್ದು ಖಂಡನೀಯ.
ಎಲ್ಲ ರಾಜ್ಯಗಳಂತೆ ಕರ್ನಾಟಕಕ್ಕೆ ಸಿಗಬೇಕಾಗಿರುವ ಅನುದಾನ ಮಾತ್ರ ಸಿಕ್ಕಿದೆ ಹೊರತು ವಿಶೇಷ ಅನುದಾನ ನೀಡಿಲ್ಲ. ಈ ಬಾರಿಯ ಬಜೆಟ್ ರೈತ ವಿರೋಧಿಯಾಗಿದೆ. ಬಡ ಹಾಗೂ ಹಿಂದುಳಿದ ವರ್ಗದ ಜನರ ಕಲ್ಯಾಣದ ಯೋಜನೆಗಳು ಯಾವುದು ಜಾರಿಗೆ ಬಂದಿಲ್ಲ. ಮಹಿಳೆಯರಿಗೆ ಈ ಬಜೆಟ್ ನಲ್ಲಿ ಆರ್ಥಿಕ ಸಾಮರ್ಥ್ಯ ಹೆಚ್ಚಿಸುವ ಯೋಜನೆಗಳು ಇಲ್ಲ. ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಿಗೆ ಆದ್ಯತೆ ನೀಡಿಲ್ಲ ಎಂದು ಶಾಸಕ ಅಶೋಕ ಮನಗೂಳಿ ಹೇಳಿದ್ದಾರೆ.