ಪ್ರಜಾಸ್ತ್ರ ಸುದ್ದಿ
ದಾವಣಗೆರೆ(Davanagere): ಸಾರಿಗೆ ಬಸ್ಸಿನ ಆ್ಯಕ್ಸಲ್ ಕಟ್ ಬಸ್ ಪಲ್ಟಿಯಾಗಿರುವ ಘಟನೆ ಚನ್ನಗಿರಿ ತಾಲೂಕಿನ ಮರಬನಹಳ್ಳಿ ಹತ್ತಿರ ನಡೆದಿದೆ. ಈ ಅಪಘಾತದಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇದರಲ್ಲಿ 20 ಜನರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆ ಹಾಗೂ ಬಸವಾಪಟ್ಟಣ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.
ದಾವಣಗೆರೆಯಿಂದ ಬಸವಾಪಟ್ಟಣಕ್ಕೆ ಬಸ್ ಹೊರಟಿತ್ತು. ಮುಂಜಾನೆ ಸಮಯವಾಗಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ನಗರಕ್ಕೆ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಇದ್ದರು. ಬಸ್ಸಿನ ಆ್ಯಕ್ಸಲ್ ಕಟ್ ಆಗಿ ಗಾಲಿಗಳು ಕಳಚಿಕೊಂಡಿವೆ. ಬಸ್ ಪಲ್ಟಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಿದ್ದಾರೆ. ಈ ಘಟನೆಯಲ್ಲಿ 21 ವರ್ಷದ ವಿದ್ಯಾರ್ಥಿ ದರ್ಶನ್ ಮೃತಪಟ್ಟಿದ್ದಾನೆ. ಗ್ರಾಮಸ್ಥರು ಸ್ಥಳಕ್ಕೆ ಬಂದು ಬಸ್ಸಿನಲ್ಲಿ ಸಿಲುಕಿದ್ದವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲು ಸಹಾಯ ಮಾಡಿದ್ದಾರೆ.




