ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಶಿವಮೊಗ್ಗ ಜಿಲ್ಲೆ ಸಾಗರದ ನೆಹರೂ ಕ್ರೀಡಾಂಗಣದಲ್ಲಿ ಇಂದು ಸಾಗರ ಸಿಗಂದೂರು ನಡುವಿನ ಸೇತುವೆ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಿದೆ. ಕೇಂದ್ರ ಸಚಿವ ನಿತಿನ್ ಗಡ್ಕರ್ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೂ ಆಹ್ವಾನಿಸಲಾಗಿದೆ. ಆದರೆ, ಈ ಬಗ್ಗೆ ನನಗೆ ಮುಂಚಿತವಾಗಿ ತಿಳಿಸಿಲ್ಲ. ಹೀಗಾಗಿ ಭಾಗವಹಿಸಲು ಆಗುತ್ತಿಲ್ಲ. ಬೇರೊಂದು ದಿನ ನಿಗದಿ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರನ್ನು ಸಹಾ ಮುದ್ರಿಸಲಾಗಿದೆ. ಆದರೆ ನನಗೆ ಈ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡದ ಕಾರಣದಿಂದ ಈಗಾಗಲೇ ನನ್ನ ಅಧ್ಯಕ್ಷತೆಯಲ್ಲಿ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆಯು ಇಂತಹ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜನೆಗೆ ಮುನ್ನ ರಾಜ್ಯ ಸರ್ಕಾರವನ್ನು ಮುಂಚಿತವಾಗಿಯೇ ಸಂಪರ್ಕಿಸಿದ್ದರೆ ಮತ್ತಷ್ಟು ಸಮರ್ಪಕವಾಗಿರುತ್ತಿತ್ತು. ಮುಂದೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ಸಕಾಲದಲ್ಲಿ ಸಂಪರ್ಕಿಸುವಂತೆ ಹೆದ್ದಾರಿ ಮತ್ತು ಭೂಸಾರಿಗೆ ಇಲಾಖೆಗೆ ಸೂಚನೆ ನೀಡಬೇಕು ಎಂದು ತಮ್ಮಲ್ಲಿ ವಿನಂತಿಸುತ್ತೇನೆ. ಇಂದಿನ ಕಾರ್ಯಕ್ರಮವನ್ನು ಮುಂದೂಡಿ, ನಿಮಗೆ ಅನುಕೂಲವಾಗುವ ಒಂದೆರೆಡು ದಿನಾಂಕಗಳನ್ನು ನನಗೆ ಒದಗಿಸಬೇಕೆಂದು ಕೋರುತ್ತೇನೆ. ಆ ಮೂಲಕ ಇಂಥದ್ದೊಂದು ಮಹತ್ವದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ನಾನು ಕೂಡ ಭಾಗವಹಿಸಲು ಸಾಧ್ಯವಾಗಲಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.