ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಜಿಲ್ಲಾಧಿಕಾರಿ ಹಾಗೂ ಸಿಇಒಗಳ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ನಡೆಸಿದ. ಈ ವೇಳೆ ಮೊದಲು ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಯಿತು. ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 60ಕ್ಕಿಂತ ಕಡಿಮೆ ಫಲಿತಾಂಶ ಬಂದ ಜಿಲ್ಲೆಗಳ ಡಿಡಿಪಿಐಗೆಳಿಗೆ ನೋಟಿಸ್ ನೀಡುವಂತೆ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದರು. ಅವರಿಂದ ಸರಿಯಾದ ಉತ್ತರ ಬರದಿದ್ದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಹೇಳಿದರು.
ಎಸ್ಎಸ್ಎಲ್ ಸಿ ಫಲಿತಾಂಶ ಕಡಿಮೆ ಬರುವುದಕ್ಕೆ ಶಿಕ್ಷಕರ ಕೊರತೆ, ಸಿಬ್ಬಂದಿ ಕೊರತೆ ಎನ್ನುವ ನೆಪ ಹೇಳಬೇಡಿ. ದಕ್ಷಿಣ ಕನ್ನಡ ಹಾಗೂ ಇತರೆ ಜಿಲ್ಲೆಗಳಲ್ಲಿ ಒಳ್ಳೆಯ ಫಲಿತಾಂಶ ಬರುತ್ತಿದೆ. ಇದರ ಜವಾಬ್ದಾರಿಯನ್ನು ಡಿಡಿಪಿಐಗಳು ತೆಗೆದುಕೊಳ್ಳಬೇಕು ಎಂದು ಕಡಿಮೆ ಫಲಿತಾಂಶ ಬಂದ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳಿಗೆ ಖಡಕ್ ಸೂಚನೆ ನೀಡಿದರು. ಡಿಡಿಪಿಐಗಳು ಜಿಲ್ಲೆಯಲ್ಲಿ ಕುಳಿತು ಕೆಲಸ ಮಾಡುವುದಲ್ಲ. ಎಲ್ಲೆಡೆ ಪ್ರಯಾಣ ಮಾಡಿ ಪರಿಶೀಲಿಸಬೇಕು. ಇವರ ಮೇಲೆ ಸಿಇಒಗಳು ನಿಗಾ ವಹಿಸಬೇಕು. ಕಲ್ಯಾಣ ಕರ್ನಾಟಕ, ಹೈದ್ರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ಡಿಡಿಪಿಐ, ಬಿಇಒಗಳು ಶಾಲೆಗಳಿಗೆ ಭೇಟಿ ನೀಡುತ್ತಿದ್ದಾರಾ ಇಲ್ಲವಾ ಅನ್ನೋದರ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಗಮನಿಸಬೇಕು ಎಂದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಚಿವರಾದ ಜಿ.ಪರಮೇಶ್ವರ್, ಮಧು ಬಂಗಾರಪ್ಪ, ಪ್ರಿಯಾಂಕ್ ಖರ್ಗೆ, ಜಮೀರ್ ಅಹ್ಮದ್, ಸತೀಶ್ ಜಾರಕಿಹೊಳಿ ಸೇರಿ ಹಲವು ಸಚಿವರು, ಉನ್ನತಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.