ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಈ ಸಂಬಂಧ ಬೆಂಗಳೂರು ಮೂಲದ ಮಹಿಳೆ ರಾಜ್ಯ ಮಹಿಳಾ ಆಯೋಗಕ್ಕೆ ಮಂಗಳವಾರ ದೂರು ದಾಖಲಿಸಿದ್ದಾರೆ. ಸ್ವಾಮೀಜಿ ನನಗೆ ಲೈಂಗಿಕವಾಗಿ, ಮಾನಸಿಕವಾಗಿ, ದೈಹಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಇದೀಗ ಆಯೋಗ ಬೆಂಗಳೂರು ದಕ್ಷಿಣ ವಿಭಾಗ ಉಪ ಪೊಲೀಸ್ ಆಯುಕ್ತರು ಹಾಗೂ ಬಾಗಲಕೋಟೆ ಎಸ್ಪಿ ಅವರಿಗೆ ಪತ್ರ ಬರೆದಿದ್ದಾರೆ. ಈ ಪ್ರಕರಣವನ್ನು ಪರಿಶೀಲನೆ ಮಾಡಬೇಕು. ಸಂತ್ರಸ್ತೆಗೆ ನ್ಯಾಯ ಹಾಗೂ ರಕ್ಷಣೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಹೇಳಿದೆ.
ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ನನ್ನ ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದು, ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮಹಿಳೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಇನ್ನು ಸ್ವಾಮೀಜಿ ಏಪ್ರಿಲ್ 4ರಂದೇ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮಹಿಳೆ ಸೇರಿದಂತೆ ನಾಲ್ವರ ವಿರುದ್ಧ ದೂರು ನೀಡಿದ್ದಾರೆ.
ನನ್ನ ಹತ್ತಿರ 3 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದು, ಕೊಡದಿದ್ದರೆ ಮಾಧ್ಯಾಮ, ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದಾಗಿ ಪ್ರಚಾರ ಮಾಡುತ್ತೇವೆ. ಅತ್ಯಾಚಾರದ ದೂರು ನೀಡುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ ಅಂತಾ ಸ್ವಾಮೀಜಿ ದೂರು ಸಲ್ಲಿಸಿದ್ದಾರೆ. ಆರೋಪ ಮಾಡುತ್ತಿರುವ ಮಹಿಳೆ, ಎಂ.ಡಿ ವಿರೇಶ, ಪೃಥ್ವಿಗೌಡ, ಯಶವಂತ ಎಂಬುವರ ವಿರುದ್ಧ ಸ್ವಾಮೀಜಿ ದೂರು ಸಲ್ಲಿಸಿದ್ದಾರೆ.




