ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ದೇಶದ ತುಂಬಾ ಬಿಜೆಪಿ ಮತ ಕಳ್ಳತನದ ಮೂಲಕ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದೆ ಅನ್ನೋ ಆರೋಪ ಮಾಡುತ್ತಿದ್ದಾರೆ. ಈ ಸಂಬಂಧ ದಾಖಲೆಗಳ ಸಮೇತ ಅಂಕಿ ಸಂಖ್ಯೆಯನ್ನು ಬಿಡುಗಡೆ ಮಾಡುತ್ತಿದ್ದಾರೆ. ಇದೆ ವಿಚಾರವಾಗಿ ಕರ್ನಾಟಕದಲ್ಲಿ ನಡೆದ ಮತ ಕಳ್ಳತನದ ವಿರುದ್ಧದ ಸಹಿ ಸಂಗ್ರಹದಲ್ಲಿ 1.12 ಕೋಟಿಗೂ ಅಧಿಕ ಜನರಿಂದ ಸಹಿ ಸಂಗ್ರಹಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದರು. ಪ್ರಜಾಪ್ರಭುತ್ವದ ಶಕ್ತಿಯಾದ ಮತವನ್ನು ಕದಿಯುವ ಪ್ರಯತ್ನಗಳ ವಿರುದ್ಧ ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರು ಕರ್ನಾಟಕದಿಂದಲೇ ಧ್ವನಿ ಎತ್ತಿದ್ದಾರೆ. ಮಹದೇವಪುರ, ಆಳಂದ ಮಾತ್ರವಲ್ಲದೆ ವ್ಯಾಪಕವಾಗಿ ಹೊರ ರಾಜ್ಯಗಳಲ್ಲಿಯೂ ಮತಗಳ್ಳತನ ಪ್ರಕರಣಗಳು ನಡೆದಿರುವ ಬಗ್ಗೆ ಸಾಕ್ಷಿಸಮೇತ ಮಾಹಿತಿ ನೀಡಿ, ಮತದಾರರ ಹಕ್ಕುಗಳ ಉಳಿವಿಗಾಗಿ ಹೋರಾಟ ಮುಂದುವರೆಸಿದ್ದಾರೆ. ಈ ಹಿಂದೆ ಚಿಲುಮೆ ಸಂಸ್ಥೆಯನ್ನು ಬಳಸಿಕೊಂಡು ಯಾವ ರೀತಿಯಲ್ಲಿ ಮತದಾರರ ಮಾಹಿತಿ ಕಳ್ಳತನ ಮಾಡಲಾಯಿತು ಎಂಬುದು ರಾಜ್ಯದ ಜನರು ಗಮನಿಸಿದ್ದಾರೆ. ಆಳಂದ ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾವಣೆಗೆ ಮುನ್ನ 6,018 ಮತಗಳನ್ನು ಅಳಿಸಲು ಪ್ರಯತ್ನ ನಡೆದಿತ್ತು. ಇದೇ ರೀತಿ ರಾಜಸ್ಥಾನ, ಮಹಾರಾಷ್ಟ್ರ ಮತ್ತು ಹರಿಯಾಣ ಸೇರಿದಂತೆ ಹಲವಾರು ಇತರ ರಾಜ್ಯಗಳಲ್ಲಿ ಅಕ್ರಮಗಳು ಕಂಡುಬಂದಿವೆ.ನವೆಂಬರ್ 25ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಲು ಚಿಂತನೆ ನಡೆಸಲಾಗಿದೆ ಎಂದರು.
ರಾಜ್ಯದ ಪ್ರತಿಯೊಂದ ಜಿಲ್ಲೆಯಿಂದ ಸಹಿ ಸಂಗ್ರಹಿಸಲಾಗಿದೆ. 1 ಕೋಟಿ 12 ಲಕ್ಷದ 41 ಸಾವಿರ ಜನರಿಂದ ಸಹಿ ಸಂಗ್ರಹಿಸಲಾಗಿದೆ. ನವೆಂಬರ್ 10ರಂದು ಇದನ್ನು ದೆಹಲಿಗೆ ತೆಗೆದುಕೊಂಡು ಹೋಗಿ ಎಐಸಿಸಿ ಕಚೇರಿಯಲ್ಲಿ ಮಾಹಿತಿ ನೀಡಲಾಗುವುದು. ಪ್ರಜಾಪ್ರಭುತ್ವದ ಉಳಿವಿಗಾಗಿ ಮತ ಕಳವು ವಿರುದ್ಧದ ಅಭಿಯಾನದಲ್ಲಿ ಭಾಗಿಯಾದ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದರು. ಈ ವೇಳೆ ಸಚಿವ ಸತೀಶ್ ಜಾರಕಿಹೊಳಿ ಸೇರಿ ಅನೇಕರು ಭಾಗವಹಿಸಿದ್ದರು.




