ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): 2026ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನ ಹಿನ್ನೆಲೆಯಲ್ಲಿ ಏಪ್ರಿಲ್ 1ರಿಂದ ಜಿಲ್ಲೆಯಲ್ಲಿ ಸರಕಾರಿ ಕಚೇರಿ ಸಮಯ ಬದಲಾವಣೆಯಾಗುತ್ತಿದ್ದಂತೆಯೇ, ಬುಧವಾರ ಬೆಳಗ್ಗೆಯೇ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಸೇರಿದಂತೆ ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಅಧಿಕಾರಿ, ಸಿಬ್ಬಂದಿ ಹಾಜರಾತಿ ಪರಿಶೀಲಿಸಿದರು.
ಎಲ್ಲ ಅಧಿಕಾರಿ, ಸಿಬ್ಬಂದಿ ನಿಗದಿತ ಸಮಯಕ್ಕೆ ಕಚೇರಿಗೆ ಹಾಜರಾಗಬೇಕು. ದೈನಂದಿನ ಕಚೇರಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ಯಾವುದೇ ಸಿಬ್ಬಂದಿ ಯಾವುದೇ ಕಡತ, ವಹಿ ಬಾಕಿ ಉಳಿಸಿಕೊಳ್ಳದೇ ಕಾರ್ಯ ನಿರ್ವಹಿಸುವ ಮೂಲಕ ಕಡತಗಳನ್ನು ವಿಲೇವಾರಿಯಲ್ಲಿ ಪ್ರಗತಿ ಸಾಧಿಸಬೇಕು. ತಮ್ಮ ಎಂದಿನ ಕೆಲಸ ಕಾರ್ಯಗಳಿಗೆ ಆಯಾ ಕಚೇರಿಗೆ ಆಗಮಿಸುವ ಸಾರ್ವಜನಿಕರಿಗೆ ಸ್ಪಂದನೆ ನೀಡಬೇಕು. ಅವರ ಸಮಸ್ಯೆಗಳನ್ನು ಸಹಾನುಭೂತಿಯಿಂದ ಆಲಿಸಿ. ಯಾವುದೇ ಲೋಪ-ದೋಷ ಉಂಟಾಗದಂತೆ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು.
ನಿಗದಿತ ಸಮಯಕ್ಕೆ ಕಚೇರಿಯಲ್ಲಿರಲೇಕು: ಇದೇ ವೇಳೆ ಕಚೇರಿಯಲ್ಲಿ ಅಗತ್ಯ ಮೂಲಭೂತ ಸೌಲಭ್ಯ ವ್ಯವಸ್ಥೆ ಇರಬೇಕು. ಜೊತೆಗೆ ಕಚೇರಿ ಸಮಯಕ್ಕೆ ಸರಿಯಾಗಿ ಕಚೇರಿಗೆ ಹಾಜರಿರಬೇಕಾದುದು ಕಡ್ಡಾಯ. ಯಾವುದೇ ಕಚೇರಿಗೆ ಹಠಾತ್ ಭೇಟಿ ನೀಡಲಾಗುವುದು. ಕಚೇರಿಯ ವೇಳೆಯಲ್ಲಿ ಕಚೇರಿಯಲ್ಲಿದ್ದು ಕಡತಗಳನ್ನು ತಕ್ಷಣಕ್ಕೆ ವಿಲೇವಾರಿ ಮಾಡಬೇಕು ಎಂದು ಇದೇ ವೇಳೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರಿ ಕಚೇರಿ ಕೆಲಸಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಹಾಗೂ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತುರ್ತು ಸಂದರ್ಭಗಳಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶನ ನೀಡಿದರೆ ಸಮಯದ ಮಿತಿಯಿಲ್ಲದೇ ಕೆಲಸ ನಿರ್ವಹಿಸಬೇಕೆಂದು ಇದೇ ವೇಳೆ ಜಿಲ್ಲೆಯ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗೆ ಸೂಚಿಸಿದರು.




