ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಮುಂದಿನ ಆಡಳಿತದ ಅಧಿಕಾರಿಗಳು ರೂಪುಗೊಳ್ಳುವ ಪರೀಕ್ಷೆ ಇದಾಗಿದ್ದು, ಅತ್ಯಂತ ಎಚ್ಚರಿಕೆ, ಸೂಕ್ಷ್ಮವಾಗಿ ಪಾರದರ್ಶಕತೆಯಿಂದ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬ್ರೇಷನರ್ ಗ್ರೂಪ್ ಎ ಹಾಗೂ ವೃಂದ ಪರಿಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಗಸ್ಟ್ 26ರ ಮಂಗಳವಾರ ಕೆಎಎಸ್(KAS Exam) ಪರಿಕ್ಷೆ ನಡೆಯಲಿದೆ. ಪ್ರತಿ 4-5 ಪರೀಕ್ಷಾ ಕೇಂದ್ರಗಳಿಗೆ ಉಪಕೇಂದ್ರಗಳ ಮೇಲ್ವಿಚಾರಣೆಗೆ ಓರ್ವ ಎ ಹಾಗೂ ಬಿ ದರ್ಜೆಯ ಅಧಿಕಾರಿಯನ್ನು ನೇಮಿಸುವುದು. ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಕೊಂಡೊಯ್ಯಲು ಮಾರ್ಗಾಧಿಕಾರಿಯನ್ನು ನೇಮಿಸಿ ಅವರಿಗೆ ಬೆಂಗಾವಲು ಕಾರ್ಯಕ್ಕಾಗಿ ಓರ್ವ ಸಶಸ್ತ್ರ ಪೊಲೀಸ್ ಸಿಬ್ಬಂದಿ, ಗ್ರೂಪ್-ಡಿ ಸಿಬ್ಬಂದಿ, ವಾಹನದ ವ್ಯವಸ್ಥೆಗೆ ಸೂಚನೆ ನೀಡಿದರು.
ಅಭ್ಯರ್ಥಿಗಳನ್ನು ಕಟ್ಟುನಿಟ್ಟಾಗಿ ತಪಾಸಣೆಗೊಳಪಡಿಸಬೇಕು. ಅಭ್ಯರ್ಥಿಗಳ ಯಾವುದೇ ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಪೂನ್ ಇನ್ನಿತರ ಉಪಕರಣ ಬಳಸದಿರುವ ಬಗ್ಗೆ ತಪಾಸಣೆ ನಡೆಸಬೇಕು. ಪರೀಕ್ಷಾ ಹಿಂದಿನ ದಿನ ಸಿಸಿಟಿವಿ(CCTV) ಕ್ಯಾಮರಾ, ಬಾಡಿ ಕ್ಯಾಮರಾ, ಪ್ರಿಸ್ಕಿಂಗ್, ಮುಖ ಚಹರೆ ಮತ್ತು ಜಾಮರ್ ಗಳನ್ನು ಉಪ ಪರೀಕ್ಷಾ ಕೇಂದ್ರದ ಪರೀಕ್ಷಾ ಕೊಠಡಿಗಳಲ್ಲಿ ಅಳವಡಿಸುವುದು, ಪರೀಕ್ಷಾ ದಿನದಂದು ಅವುಗಳು ಕಾರ್ಯನಿರ್ವಹಿಸುತ್ತಿರುವ ಕುರಿತು ಪರಿಶೀಲಿಸಿಕೊಳ್ಳಬೇಕು. ಪರೀಕ್ಷಾ ಶುರುವಾಗುವ ಅರ್ಧಗಂಟೆಯ ಮುಂಚೆ ಜಾಮರ್ ಆನ್ ಮಾಡುವುದು, ಪರೀಕ್ಷಾ ಮುಗಿದ ಅರ್ಧ ಗಂಟೆಯ ನಂತರ ಬಂದ್ ಮಾಡುವುದು. ಎಲ್ಲಾ ಸಿಸಿಟಿವಿ ಕ್ಯಾಮರಾಗಳ ವಿಕ್ಷಣೆಗೆ ಅನುಕೂಲವಾಗುವಂತೆ ದೃಶ್ಯಾವಳಿ ವೀಕ್ಷಿಸಲು ಮಾನಿಟರ್ ಅಳವಡಿಸಿ ವೆಬ್ ಕಾಸ್ಟಿಂಗ್ ಮಾಡಬೇಕು. ಪರೀಕ್ಷಾ ಕೊಠಡಿಗಳಲ್ಲಿ ಸಾಕಷ್ಟು ಗಾಳಿ ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಖಜಾನೆ ಇಲಾಖೆ ಉಪನಿರ್ದೇಶಕ ಹಣಮಂತ ಕಾಲತಿಪ್ಪಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ, ಪೊಲೀಸ್ ಅಧಿಕಾರಿ ರವಿ, ಮಾರ್ಗಾಧಿಕಾರಿಗಳು, ಅಧೀಕ್ಷಕರು, ಸ್ಥಾನಿಕ ನಿರೀಕ್ಷಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಪ್ರಾಂಶುಪಾಲರು, ಉಪನ್ಯಾಸಕರು ಉಪಸ್ಥಿತರಿದ್ದರು.