ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ಪ್ರವಾಹದಿಂದಾಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜನರು ಮನೆಗಳನ್ನು ಕಳೆದುಕೊಂಡಿದ್ದಾರೆ. ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದ್ದು, ವಿಶೇಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಮಂಡಲ ವತಿಯಿಂದ ಅಕ್ಟೋಬರ್ 14, ಮಂಗಳವಾರದಿಂದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.
ಪಕ್ಷದ ಕಚೇರಿಯಲ್ಲಿ ಭಾನುವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಅತಿವೃಷ್ಠಿಯಿಂದ ಹಾನಿಯಾದ ಹೊಲಗಳಿಗೆ ಎಕರೆಗೆ 25 ಸಾವಿರ ರೂಪಾಯಿ ನೀಡಬೇಕು. ಪೂರ್ಣಪ್ರಮಾಣದಲ್ಲಿ ಬಿದ್ದ ಮನೆಗಳಿಗೆ 1 ಲಕ್ಷ 25 ಸಾವಿರ, ಅರ್ಧಬಿದ್ದ ಮನೆಗಳಿಗೆ 50 ಸಾವಿರ ರೂಪಾಯಿ ಕೊಡುತ್ತಿದ್ದು, ನಮ್ಮ ಸರ್ಕಾರದಲ್ಲಿ ಪೂರ್ತಿಬಿದ್ದ ಮನೆಗಳಿಗೆ 5 ಲಕ್ಷ ರೂಪಾಯಿ ನೀಡಿದ್ದು, ಹೀಗಾಗಿ ಹೆಚ್ಚಿನ ಪರಿಹಾರ ನೀಡಬೇಕು. ರೈತರಿಗೆ ಬೆಂಬಲ ಬೆಲೆ ನೀಡಬೇಕು. ಭೀಮಾನದಿ ಪ್ರವಾಹಕ್ಕೆ ತುತ್ತಾದ ಗ್ರಾಮಗಳನ್ನು ಶಾಶ್ವತವಾಗಿ ಸ್ಥಳಾಂತರ ಮಾಡಬೇಕು. ಬಸವ ವಸತಿ ಯೋಜನೆ ಅಡಿಯಲ್ಲಿ ಮನೆಗಳನ್ನು ನಿರ್ಮಿಸಿಕೊಡಬೇಕು. ಬಹುವಾರ್ಷಿಕ ಬೆಳೆಗಳಿಗೆ ಎಕರೆಗೆ 1 ಲಕ್ಷ ರೂಪಾಯಿ ಕೊಡಬೇಕು. ಸಿಂದಗಿ ಹಾಗೂ ಆಲಮೇಲ ತಾಲೂಕಿನ ಹದಗೆಟ್ಟ ರಸ್ತೆಗಳನ್ನು ಸರಿಪಡಿಸುವ ಕೆಲಸವಾಗಬೇಕು ಅನ್ನೋ 6 ಬೇಡಿಕೆಗಳನ್ನು ಇಟ್ಟುಕೊಂಡು ಧರಣಿ ನಡೆಸಲಾಗುವುದು ಎಂದರು.
ಶಾಸಕರು ಹಾಕಿರುವ ಸವಾಲಿಗೆ ದೀಪಾವಳಿ ನಂತರ ಉತ್ತರ ನೀಡುತ್ತೇನೆ. ರೈತರ ವಿಚಾರದ ವೇಳೆ ರಾಜಕೀಯ ಮಾಡುವುದು ಬೇಡ. ಅವರದು ನಮ್ಮದು ಮುಂದ ರಾಜಕೀಯ ಇರುತ್ತೆ. ಮೂರು ಜಾಗದ್ದು ಹೇಳಿದ್ದೇನೆ. ಅದನ್ನು ಹೇಳುತ್ತೇನೆ ಅಂತಾ ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.
ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಡಂಬಳ, ನಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಗುರು ತಳವಾರ, ರೈತ ಮೋರ್ಚಾ ತಾಲೂಕಾಧ್ಯಕ್ಷ ಪೀರು ಕೆರೂರು ಮಾತನಾಡಿದರು. ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಮಿ ಬಿಜಾಪುರ, ಎಸ್ಟಿ ಮೋರ್ಚಾ ಅಧ್ಯಕ್ಷ ಪ್ರಶಾಂತ ಕದ್ದರಕಿ, ಅಶೋಕ ನಾರಾಯಣಪುರ, ಮಲ್ಲು ಸಾವಳಸಂಗ, ಬಂಗಾರಪ್ಪಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.