ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಕೊಲ್ಹಾಪುರ-ಕನ್ನೇರಿ ಕಾಡಿಸಿದ್ದೇಶ್ವರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಯವರನ್ನು ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ಜಿಲ್ಲಾಧಿಕಾರಿ ಡಾ.ಆನಂದ.ಕೆ ಈ ಬಗ್ಗೆ ಆದೇಶ ಹೊರಡಿಸಿದ್ದು, ಅಕ್ಟೋಬರ್ 16ರಿಂದ ಡಿಸೆಂಬರ್ 16ರ ತನಕ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧಿಸಿ ಆದೇಶಿಸಿದ್ದಾರೆ.
ಅಕ್ಟೋಬರ್ 16, 17ರಂದು ಬಸವನಬಾಗೇವಾಡಿಯಲ್ಲಿನ ಕಾರ್ಯಕ್ರಮವೊಂದಕ್ಕೆ ಸ್ವಾಮೀಜಿ ಬರುವರಿದ್ದರು. ಅವರ ಆಗಮನಕ್ಕೆ ವಿರೋಧ ವ್ಯಕ್ತವಾಗಿದ್ದು, ಅಹಿತಕರ ಘಟನೆಗಳು ನಡೆಯಬಹುದು ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ವರದಿ ನೀಡಿರುವ ಹಿನ್ನಲೆಯಲ್ಲಿ ಸ್ವಾಮೀಜಿ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.
ಜತ್ತ ತಾಲೂಕಿನ ಬೀಳೂರಿನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಬಸವ ಸಂಸ್ಕೃತಿ ಅಭಿಯಾನದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು. ಅವಾಚ್ಯ ಶಬ್ಧಗಳನ್ನು ಬಳಸಿ ಲಿಂಗಾಯತ ಮಠಾಧೀಶ ಸ್ವಾಮೀಜಿಗಳನ್ನು ನಿಂದಿಸಿದ್ದರು. ಇದಕ್ಕೆ ದೊಡ್ಡ ಮಟ್ಟದಲ್ಲಿ ವಿರೋಧ ವ್ಯಕ್ತವಾಗಿದೆ. ಹೀಗಾಗಿ ವಿಜಯಪುರ ಜಿಲ್ಲೆಗೆ ಅವರು ಬಂದರೆ ಸರಿಯಾಗಿ ಪಾಠ ಕಲಿಸುತ್ತೇವೆ. ಅವರನ್ನು ನಿರ್ಬಂಧಿಸಬೇಕು ಎಂದು ಹೋರಾಟಗಳು ನಡೆದಿದ್ದವು. ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿತ್ತು.




