ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಜಿಲ್ಲಾ ಪೊಲೀಸ್ ವತಿಯಿಂದ ರವಿವಾರ ವಿಶ್ವ ಪ್ರಸಿದ್ಧ ಗೋಲಗುಮ್ಮಟ ಆವರಣದಲ್ಲಿ ಹಮ್ಮಿಕೊಂಡ “ಡ್ರಗ್ ಫ್ರೀ ಕರ್ನಾಟಕ” “ಫಿಟ್ನೆಸ್ ಫಾರ್ ಆಲ್” ಹಾಗೂ “ನಮ್ಮ ಪೊಲೀಸ್ ನಮ್ಮ ಹೆಮ್ಮ” ಥೀಮ್ನ ಅಡಿಯಲ್ಲಿ ಕರ್ನಾಟಕ ಪೊಲೀಸ್ ರನ್ 2025 ಮ್ಯಾರಾಥಾನ್ 5 ಕಿಲೋ ಮೀಟರ್ ಓಟಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ವ್ಯಸನಕ್ಕೆ ಒಳಗಾಗದೆ ಸುಂದರ ಜೀವನ ರೂಪಿಸಿಕೊಳ್ಳಲು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಡ್ರಗ್ಸ್ ಫ್ರಿ ಕರ್ನಾಟಕ, ಫಿಟನೆಸ್ ಫಾರ್ ಆಲ್ ಹಾಗೂ ನಮ್ಮ ಪೊಲೀಸ್ ನಮ್ಮ ಹೆಮ್ಮೆಯ ವಿಷಯಧಾರಿತ ಕರ್ನಾಟಕ ಪೊಲೀಸ್ ರನ್-2025 ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಸದೃಢ ಸಮಾಜಕ್ಕಾಗಿ ಇಂತಹ ಕಾರ್ಯಕ್ರಮಗಳು ಜಾಗೃತಿ-ಅರಿವು ಮೂಡಿಸಲು ಅತ್ಯಗತ್ಯವಾಗಿದೆ. ಇಂತಹ ಕಾರ್ಯಕ್ರಮಗಳು ಉದ್ದೇಶ ಸಫಲತೆ ಕಾಣಲು, ಸಾಮಾಜಿಕವಾಗಿ ಸಂಘ ಸಂಸ್ಥೆಗಳು, ಶಾಲಾ ಕಾಲೇಜ್ಗಳು ಕೈ ಜೋಡಿಸುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಅವರು ಹೇಳಿದರು. ಡ್ರಗ್ಸ್ ನಿಯಂತ್ರಣದಲ್ಲಿ ಸಾರ್ವಜನಿಕರ ಸಹಕಾರವು ಅತ್ಯಗತ್ಯವಾಗಿದೆ. ಪ್ರತಿಯೊಬ್ಬರೂ ಮಾನಸಿಕ ಹಾಗೂ ದೈಹಿಕ ಸದೃಢತೆ ಹೊಂದುವುದು ಅತ್ಯಗತ್ಯವಾಗಿರುವುದರಿಂದ ಇಂತಹ ಕಾರ್ಯಕ್ರಮಗಳ ಜಾಗೃತಿ ಮೂಡಿಸುವುದು ಅವಶ್ಯಕವಾಗಿದ್ದು, ಜಿಲ್ಲಾಡಳಿತ ವತಿಯಿಂದಲೂ ವಿವಿಧ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದ್ದು, ಪಾಲಕರು ಅರಿವು ಹೊಂದಿ ಮಕ್ಕಳ ಬಗ್ಗೆ ಕಾಳಜಿ ವಹಿಸಿ ಯಾವುದೇ ವ್ಯಸನಕ್ಕೆ ಬಲಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದರು.
ಸಮಾಜದ ಸುರಕ್ಷತೆಯ ಹಿತದೃಷ್ಟಿಯಿಂದ ಬಿಡುವಿಲ್ಲದೇ ದಿನನಿತ್ಯದ 24 ಗಂಟೆಗಳ ಕಾರ್ಯ ನಿರ್ವಹಿಸುವ ಪೊಲೀಸ್ರು ಸಹ ತಮ್ಮ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಲು ಪ್ರತಿ ದಿನ ಒಂದು ಗಂಟೆಗಳ ಕಾಲ ದೈಹಿಕ ಸದೃಢತೆಗೆ ಸಮಯ ಮೀಸಲಿಡುವ ಮೂಲಕ ದೈಹಿಕವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಎಂದು ಅವರು ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ಶಾಸಕ ವಿಠ್ಠಲ ಕಟಕದೊಂಡ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ನಿಂಬರಗಿ ಅವರು ಓಟದಲ್ಲಿ ಪಾಲ್ಗೊಳ್ಳುವ ಮೂಲಕ ಹುರಿದುಂಬಿಸಿದರು.
ಮ್ಯಾರಾಥಾನ್ ಓಟವು ಗೋಲಗುಂಬಜ್ನಿಂದ ಆರಂಭವಾಗಿ, ಜಿಲ್ಲಾ ಕ್ರೀಡಾಂಗಣ, ಬಸವೇಶ್ವರ ವೃತ್ತ, ಗಾಂಧಿಚೌಕ, ಶಿವಾಜಿ ವೃತ್ತ, ವಾಟರ್ ಟ್ಯಾಂಕ್, ಸೋಲಾಪೂರ ರಸ್ತೆ ಮಾರ್ಗವಾಗಿ ಜಿಲ್ಲಾ ಪೊಲೀಸ್ ಕವಾಯತು ಮೈದಾನಕ್ಕೆ ಬಂದು ಮುಕ್ತಾಯಗೊಂಡಿತು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶಂಕರ ಮಾರಿಹಾಳ, ರಾಮನಗೌಡ ಹಟ್ಟಿ, ಡಿವೈಎಸ್ಪಿ ಬಸವರಾಜ ಯಲಿಗಾರ ಸೇರಿದಂತೆ ಜಿಲ್ಲಾ ಪೊಲೀಸ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳು, ವಿವಿಧ ಸಂಘ-ಸಂಸ್ಥೆಗಳು, ಸಾರ್ವಜನಿಕರು ಮ್ಯಾರಾಥಾನ್ದಲ್ಲಿ ಭಾಗವಹಿಸಿದ್ದರು.