ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ 6 ಜನರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಶುಕ್ರವಾರ ಸಂಜೆ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದೆ. ಸುಮಾರು 15-20 ಜನ ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಇದರಿಂದಾಗಿ ಇಡೀ ಜಿಲ್ಲೆಯ ಜನತೆ ಬೆಚ್ಚಿ ಬಿದ್ದಿದೆ.
ಚಂದು ನಿರಾಳೆ(56), ದುಂಡಪ್ಪ ನಿರಾಳೆ(65), ಶಿವಪುತ್ರ ನಿರಾಳೆ(60), ರಾಹುಲ್ ನಿರಾಳೆ(35), ಸಮರ್ಥ ನಿರಾಳೆ(24) ಹಾಗೂ ಶಬ್ಬೀರ್ ನದಾಫ್(50) ಕೊಲೆಯಾದವರೆಂದು ತಿಳಿದು ಬಂದಿದೆ. ಸ್ಥಳದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿದೆ. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಘಟನೆಗೆ ಕಾರಣ: ಗೋವಿಂದಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಸೇರಿದ 24 ಎಕರೆ ವಿವಾದಿತ ಜಮೀನನ್ನು ನಿರಾಳೆ ಕುಟುಂಬಸ್ಥರು 6 ತಿಂಗಳ ಹಿಂದೆ ಖರೀದಿ ಮಾಡಲು ಮುಂದಾಗಿದ್ದಾರೆ. ಆಗ ಗ್ರಾಮಸ್ಥರು ವಿವಾದಿತ ಜಮೀನು ಇದೆ. ಖರಿದೀಸಬೇಡಿ ಎಂದು ಎಚ್ಚರಿಕೆ ಸಹ ನೀಡಿದ್ದರಂತೆ. ಆದರೂ ನಿರಾಳೆ ಕುಟುಂಬಸ್ಥರು ಖರೀದಿ ಮಾಡಿದ್ದಾರೆ. ಶುಕ್ರವಾರ ಜೆಸಿಬಿ, ಟ್ರ್ಯಾಕ್ಟರ್ ಮೂಲಕ ಹೊಲ ಸ್ವಚ್ಛಗೊಳಿಸುವ ಕೆಲಸ ಮಾಡುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ದಾಳಿ ಮಾಡಿ 6 ಜನರ ಜೀವ ಬಲಿ ಪಡೆದಿದ್ದಾರೆ. ಹಂತಕರು ಯಾರು ಅನ್ನೋದರ ಮಾಹಿತಿ ಸಿಕ್ಕಿಲ್ಲ.



