ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ನಗರ ಹಾಗೂ ಜಿಲ್ಲೆಯಾದ್ಯಂತ ಯಾವುದೇ ಅಧಿಕೃತ ಅನುಮತಿ ಪಡೆಯದೆ, ನಿಯಮಗಳನ್ನು ಉಲ್ಲಂಘಿಸಿ ನಡೆಯುತ್ತಿರುವ ಪಿಜಿ ಹಾಗೂ ಖಾಸಗಿ ಸ್ಟೆಡಿ ಲೈಬ್ರರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅಶೋಕ ಧಾಮ ಫೌಂಡೇಶನ್ ಆಗ್ರಹಿಸಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಫೌಂಡೇಶನ್ ಪದಾಧಿಕಾರಿಗಳು, ಇತ್ತೀಚಿನ ದಿನಗಳಲ್ಲಿ ವಿಜಯಪುರ ನಗರದಲ್ಲಿ ವಿದ್ಯಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನೇ ದುರುಪಯೋಗಪಡಿಸಿಕೊಂಡು ಹಲವು ಅನಧಿಕೃತ ಪಿಜಿಗಳು ಮತ್ತು ಖಾಸಗಿ ಸ್ಟೆಡಿ ಲೈಬ್ರರಿಗಳು ತಲೆ ಎತ್ತಿವೆ ಎಂದು ಆರೋಪಿಸಲಾಗಿದೆ..
ಈ ಕುರಿತು ಮಾಧ್ಯಮದ ಜೋತೆ ಮಾತನಾಡಿದ ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಪ್ರಕಾಶ ಮಿರ್ಜಿ, ಬಹುತೇಕ ಪಿಜಿ ಹಾಗೂ ಲೈಬ್ರರಿಗಳು ಸ್ಥಳೀಯ ಮಹಾನಗರ ಪಾಲಿಕೆಯಿಂದ ಅಗತ್ಯ ಪರವಾನಗಿ ಪಡೆಯದೆ ಕಾರ್ಯನಿರ್ವಹಿಸುತ್ತಿವೆ. ಅಲ್ಲದೆ, ಅಗ್ನಿಶಾಮಕ ಇಲಾಖೆಯ ನಿರಾಕ್ಷೇಪಣಾ ಪತ್ರ (NOC), ತುರ್ತು ನಿರ್ಗಮನ ದ್ವಾರಗಳು ಹಾಗೂ ಕನಿಷ್ಠ ಸುರಕ್ಷತಾ ವ್ಯವಸ್ಥೆಗಳಿಲ್ಲದೆ ಮನೆಗಳು ಮತ್ತು ಕಿರಿದಾದ ಕಟ್ಟಡಗಳಲ್ಲಿ ಇವುಗಳನ್ನು ನಡೆಸಲಾಗುತ್ತಿದೆ ತಕ್ಷಣ ಇವುಗಳ ಮೇಲೆ ಮಾನ್ಯ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಸಮಾಜ ಸೇವಕರಾದ ಸಂಗಮೇಶ ಸಗರ ಮಾತನಾಡಿ, ಕೆಲವು ಪಿಜಿ ಹಾಗೂ ಲೈಬ್ರರಿಗಳಲ್ಲಿ ಭದ್ರತಾ ಲೋಪಗಳಿದ್ದು, ಹಲವು ಕಡೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿಲ್ಲ , ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಪ್ರವೇಶ ನಿರ್ಗಮನದ ದಾಖಲಾತಿ ಪುಸ್ತಕಗಳನ್ನು (ರಿಜಿಸ್ಟರ್) ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು ಮತ್ತು ವಿಶೇಷವಾಗಿ ಯುವತಿಯರ ಸುರಕ್ಷತೆ ಕುರಿತು ಆತಂಕ ಮೂಡಿದೆ. ಹೀಗಾಗಿ ಮಹಾನಗರ ಪಾಲಿಕೆ, ಪೊಲೀಸ್ ಹಾಗೂ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಇದರ ಬಗ್ಗೆ ನಿಗಾ ವಹಿಸಿ ನಗರದಲ್ಲಿರುವ ಎಲ್ಲಾ ಪಿಜಿ ಮತ್ತು ಖಾಸಗಿ ಲೈಬ್ರರಿಗಳ ಕಡ್ಡಾಯ ತಪಾಸಣೆ ನಡೆಸಬೇಕು. ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸುವ ಸಂದರ್ಭದಲ್ಲಿ ಅಶೋಕ ಧಾಮ ಫೌಂಡೇಶನ್ ಪದಾಧಿಕಾರಿಗಳಾದ ಮಧೂರ, ಶಶಿಧರ, ಅಭಿಲಾಷ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಹಾಗೂ ಫೌಂಡೇಶನ್ ಗೌರವ ಅಧ್ಯಕ್ಷ ಪ್ರಕಾಶ್ ಮಿರ್ಜಿ, ಲಖನ್ ಮತ್ತು ವಿಶ್ವಾರಾಧ್ಯ ವಾಲಿಕಾರ ಉಪಸ್ಥಿತರಿದ್ದರು.



