ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬಿಜೆಪಿ ಮಾಜಿ ಸಚಿವ ರಾಮಚಂದ್ರೇಗೌಡ(88) ಅವರು ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಇವರ ನಿಧನಕ್ಕೆ ಬಿಜೆಪಿ ನಾಯಕರು ಸೇರಿದಂತೆ ರಾಜಕೀಯ ವಲಯದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿರುವ ಮಾಜಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಮತ್ತೋರ್ವ ಸೋದರನನ್ನು ನಾನು ಕಳೆದುಕೊಂಡಿದ್ದೇನೆ. ನನ್ನ ದಶಕಗಳ ಕಾಲದ ಆತ್ಮೀಯ ಒಡನಾಡಿ, ಹಿರಿಯ ನಾಯಕ ಹಾಗೂ ಮಾಜಿ ಸಚಿವ ಶ್ರೀರಾಮಚಂದ್ರಗೌಡರ ನಿಧನ ಸುದ್ದಿ ಅತೀವ ದುಂಖವನ್ನು ತಂದಿದೆ. ಜನಸಂಘದ ದಿನಗಳಿಂದಲೂ ಹೆಗಲಿಗೆ ಹೆಗಲು ಕೊಟ್ಟು, ಹಗಲಿರುಳು ಶ್ರಮಿಸಿ, ರಾಜ್ಯದಲ್ಲಿ ಪಕ್ಷವನ್ನು ತಳಮಟ್ಟದಿಂದ ಜೊತೆಯಾಗಿ ಕಟ್ಟಿದ ಹೋರಾಟದ ದಿನಗಳು ಕಣ್ಣಮುಂದೆ ಸುಳಿಯುತ್ತಿವೆ. ನನ್ನ ಸಚಿವ ಸಂಪುಟದ ಸಹೋದ್ಯೋಗಿಯಾಗಿ ಅವರ ಆಡಳಿತಾತ್ಮಕ ದಕ್ಷತೆ ಹಾಗೂ ಬದ್ದತೆಯನ್ನು ನಾನು ಅತ್ಯಂತ ಹತ್ತಿರದಿಂದ ಕಂಡಿದ್ದೇನೆ. ಅವರ ಅಗಲಿಕೆ ಪಕ್ಷಕ್ಕೆ, ಸಾರ್ವಜನಿಕ ಕ್ಷೇತ್ರಕ್ಕೆ ಮಾತ್ರವಲ್ಲ ವೈಯಕ್ತಿಕವಾಗಿ ನನ್ನಲ್ಲಿಯೂ ದೊಡ್ಡ ನಿರ್ವಾತವನ್ನು ಸೃಷ್ಟಿಸಿದೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ದಯಪಾಲಿಸಲಿ. ಅವರ ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.



