ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಪ್ರಜಾಪ್ರಭುತ್ವ ವ್ಯವಸ್ಥೆ ಪ್ರತಿ ಐದು ವರ್ಷಕ್ಕೊಮ್ಮೆ ಮತ ಚಲಾಯಿಸುವುದಲ್ಲ. ಪ್ರಜಾಪ್ರಭುತ್ವ ಎಂದರೆ ಅದೊಂದು ಜವಾಬ್ದಾರಿ. ಸಂವಿಧಾನದ ಆಶಯದಂತೆ ಪರಸ್ಪರ ಚರ್ಚೆ, ಸಮಾಲೋಚನೆ, ಸಹಕಾರ ಹಾಗೂ ಸಮಾನತೆಯಿಂದ ಎಲ್ಲರನ್ನೂ ಒಗ್ಗೂಡಿಸಿಕೊಂಡು, ಎಲ್ಲರನ್ನೂ ಭ್ರಾತೃತ್ವ ಭಾವದಿಂದ ಕೊಂಡೊಯ್ಯುವುದೇ ಪ್ರಜಾಪ್ರಭುತ್ವದ ಸೌಂದರ್ಯ ಅಡಗಿದೆ ಎಂದು ನಾಗಠಾಣ ಶಾಸಕರಾದ ವಿಠ್ಠಲ ಕಟಕದೊಂಡ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಗಳ ಸಹಯೋಗದಲ್ಲಿ ಮಂಗಳವಾರ ನಗರದ ಕಂದಗಲ್ ಹನುಮಂತರಾಯ ರಂಗಮAದಿರದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ, ಯುವ ಸಂಸತ್ತು ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
2007ರಲ್ಲಿ ವಿಶ್ವಸಂಸ್ಥೆಯಲ್ಲಿ ಸೆಪ್ಟಂಬರ್ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಚರಿಸಬೇಕು ಎಂದು ಠರಾವು ಪಾಸು ಮಾಡಿತು. 2008ರಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸುತ್ತಿದ್ದೇವೆ ಎಂದರು. ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆ ಎಂಬುದು ಈ ದೇಶದಲ್ಲಿ ಸರ್ವಾಂತರ್ಯಾಮಿಯಾಗಿದೆ. ಅದು ಎಲ್ಲ ಕಡೆಯೂ ಇದೆ. ಆದರೆ ಕಾನೂನು ಉಲ್ಲಂಘನೆಯಾದಾಗ ಸಂವಿಧಾನದ ಮಹತ್ವ ಅರಿವಿಗೆ ಬರುತ್ತದೆ. ಹಾಗಾಗಿ ಈ ದೇಶದಲ್ಲಿ ಯಾವುದೂ ಸುಪ್ರಿಂ ಅಲ್ಲ. ಸಂವಿಧಾನ ಮಾತ್ರವೇ ಸುಪ್ರಿಂ ಆಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಮಾತನಾಡಿ, ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಅಭಿವೃದ್ಧಿ ಶೀಲ ರಾಷ್ಟ್ರವಾಗಿ ಮುಂದುವರಿದಿದೆ. ಹಾಗಾಗಿ ಸಾಕಷ್ಟು ಕೆಲಸ ಮಾಡಬೇಕಾಗಿದೆ. ಇಂತಹ ವ್ಯವಸ್ಥೆ ಹೊಂದಿರುವ ನಮ್ಮ ರಾಷ್ಟ್ರದ ವಿದ್ಯಾರ್ಥಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಾಕಷ್ಟು ಅರ್ಥ ಮಾಡಿಕೊಳ್ಳಬೇಕಿದೆ ಎಂದರು.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಮಾಧ್ಯಮ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ.ಓಂಕಾರ ಕಾಕಡೆ ಅವರು ವಿಶೇಷ ಉಪನ್ಯಾಸ ನೀಡಿದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಸಂವಿಧಾನ ಪೀಠಿಕೆ ವಾಚಿಸಿ, ಸ್ವಾಗತಿಸಿದರು. ತಾಲೂಕು ಸಮಾಜ ಕಲ್ಯಾಣಧಿಕಾರಿ ಎಂ.ಜೆ.ಇಂಡಿ ಅವರು ವಂದಿಸಿದರು.


