ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ವಿಜಯಪುರ ಜಿಲ್ಲೆಯ ಸಿಂದಗಿ ಹಾಗೂ ಆಲಮೇಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಶನಿವಾರ ಪ್ರತಿಭಟನೆ ನಡೆಸಿತು. ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಸಂಘದ ಬೆಳಗಾವಿ ವಿಭಾಗೀಯ ರಾಜ್ಯ ಉಪಾಧ್ಯಕ್ಷ ಬಸನಗೌಡ ಧರ್ಮಗೊಂಡ, ವಿಜಯಪುರ ಜಿಲ್ಲೆಯ ಮೂರು ತಾಲೂಕುಗಳನ್ನು ಮಾತ್ರ ಬರಪೀಡಿತ ಎಂದು ಘೋಷಿಸಲಾಗಿದೆ. ಈ ಮೂಲಕ ಉಳಿದ ತಾಲೂಕುಗಳಿಗೆ ಅನ್ಯಾಯ ಮಾಡಲಾಗಿದೆ ಎಂದರು.
ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು. ಈ ಮೂಲಕ ಜಿಲ್ಲೆಯ ಎಲ್ಲ ರೈತರನ್ನು ರಕ್ಷಣೆ ಮಾಡಬೇಕು. ಯಾಕಂದರೆ ಮಳೆ ಇಲ್ಲದ ಕಾರಣ ಜನರು ಗೋಳೆ ಹೋಗುತ್ತಿದ್ದಾರೆ. ರೈತರಿಗೆ ಬೆಳೆ ಪರಿಹಾರ, ಬೆಳೆ ವಿಮೆ ಹಾಗೂ ಬರಪೀಡಿತ ಎಂದು ಘೋಷಣೆ ಮಾಡಬೇಕು ಎಂದು ಕೃಷಿ ಸಚಿವರಿಗೆ ಮನವಿ ಮಾಡುತ್ತೇವೆ ಅಂತಾ ಹೇಳಿದರು. ಶಿರಸ್ತೇದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಸಿಂದಗಿ ನಗರ ಘಟಕದ ಅಧ್ಯಕ್ಷ ಶಿವಪ್ಪ ಸುಲ್ಫಿ, ಸಿಂದಗಿ ತಾಲೂಕಾಧ್ಯಕ್ಷ ಧರ್ಮಣ್ಣ ಗಬಸವಳಗಿ, ಗುಬ್ಬೇವಾಡ ಗ್ರಾಮ ಘಟಕ ಅಧ್ಯಕ್ಷ ಶಿವಾನಂದ ಕೊಂಡಗೂಳಿ, ಬಾಪುಗೌಡ ಬಿರಾದಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.



