ಪ್ರಜಾಸ್ತ್ರ ಸುದ್ದಿ
ದೇವದುರ್ಗ(Devadurga): ಇತ್ತೀಚೆಗೆ ಅಕಾಲಿಕವಾಗಿ ಸುರಿದ ಆಲಿಕಲ್ಲು ಮಳೆಯಿಂದಾಗಿ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನಲ್ಲಿ ಬೆಳೆಗಳು ಹಾನಿಯಾಗಿವೆ. ಹೀಗಾಗಿ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಹೇಳಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಲಾಯಿತು.
ಮಳೆ, ಗಾಳಿಯಿಂದ ಭತ್ತ, ಒಣಗಿದ ಮೆಣಸಿನಕಾಯಿ, ಶೇಂಗಾ, ಈರುಳ್ಳಿ, ಸಜ್ಜೆ ಬೆಳೆಗಳು ಸಂಪೂರ್ಣವಾಗಿ ಹಾನಿ ಆಗಿವೆ. ಈ ಭಾಗದಲ್ಲಿ ಮಳೆಗಾಲದಲ್ಲಿ ಮಳೆ ಬಂದರೂ ಬೆಳೆಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಈಗ ಅಕಾಲಿಕವಾಗಿ ಬಂದ ಮಳೆಯಿಂದ ಬೆಳೆ ಹಾನಿಯಾಗಿದ್ದ ಪರಿಹಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ವೇಳೆ ತಾಲೂಕು ಅಧ್ಯಕ್ಷ ಮರಿಲಿಂಗ ಪಾಟೀಲ ಸೇರಿದಂತೆ ಪದಾಧಿಕಾರಿಗಳು, ರೈತರು ಉಪಸ್ಥಿತರಿದ್ದರು.




