ಪ್ರಜಾಸ್ತ್ರ ಸುದ್ದಿ
ಕೆ.ಆರ್.ಪೇಟೆ(KR Pete): ಪಟ್ಟಣದ ಪ್ರಮುಖ ವೃತ್ತದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಬೇಕು ಹಾಗೂ ಹಳೆ ಕಿಕ್ಕೇರಿ ರಸ್ತೆಗೆ ಅಂಬೇಡ್ಕರ್ ರಸ್ತೆ ಎಂದು ನಾಮಕರಣ ಮಾಡಿ ಸ್ವಾಗತ ಕಮಾನು ನಿರ್ಮಾಣ ಮಾಡಬೇಕು. ತಾಲೂಕಿನಾದ್ಯಂತ ಇರುವ ದಲಿತ ಬಂಧುಗಳಿಗೆ ಆಶ್ರಯ ಮನೆ ಮತ್ತು ಉಚಿತ ನಿವೇಶನ ಒದಗಿಸಿಕೊಡಬೇಕು ಎಂದು ಒತ್ತಾಯಿಸಿ ತಾಲೂಕು ದಲಿತ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಸಾವಿರಾರು ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ತಮಟೆ ಚಳುವಳಿ ಮೂಲಕ ಪ್ರತಿಭಟನೆ ನಡೆಸಿದರು. ತಾಲೂಕು ದಲಿತ ಸಂಘಟನೆಗಳ ಒಕ್ಕೂಟ, ತಾಲೂಕು ಛಲವಾದಿ ಮಹಾಸಭಾ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ, ಕರ್ನಾಟಕ ದಲಿತ ಸೇನೆ ಸೇರಿದಂತೆ ವಿವಿಧ ದಲಿತ ಪರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಪ್ರವಾಸಿ ಮಂದಿರದಿಂದ ತಮಟೆ ಚಳುವಳಿ ಮೂಲಕ ಮೆರವಣಿಗೆ ನಡೆಸಿ, ತಾಲೂಕು ಕಚೇರಿಗೆ ಮುತ್ತಿಗೆ ಹಾಕಲಾಯಿತು. ಕೂಡಲೇ ತಾಲೂಕು ಕಚೇರಿ ಮುಂಭಾಗ ತಾಲೂಕು ಆಡಳಿತದ ವತಿಯಿಂದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ ಮಾಡಬೇಕು. ಜೊತೆಗೆ ಪಟ್ಟಣದ ಟಿ.ಬಿ.ವೃತ್ತದ ಬಳಿ ಇರುವ ಲೋಕೋಪಯೋಗಿ ಇಲಾಖೆಯ ಜಾಗದಲ್ಲಿ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ ಮಾಡಲು ಜಿಲ್ಲಾಡಳಿತವು ಅವಕಾಶ ನೀಡಬೇಕು. ಇಲ್ಲದಿದ್ದರೆ ತಾಲೂಕು ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದಲೇ ನಿಧಿ ಸಂಗ್ರಹಿಸಿ ಅಂಬೇಡ್ಕರ್ ಅವರ ಪ್ರತಿಮೆಯನ್ನು ಸ್ಥಾಪನೆ ಮಾಡಬೇಕಾಗುತ್ತದೆ ಇದಕ್ಕೆ ಅಡ್ಡಿ ಪಡಿಸಿದರೆ ನಾವು ಅಂಬೇಡ್ಕರ್ ಅವರಿಗಾಗಿ ಜೈಲಿಗೆ ಹೋಗಲು ಸಿದ್ದವಿರುವುದಾಗಿ ಪ್ರತಿಭಟನೆಯ ನೇತೃತ್ವ ವಹಿಸಿದ್ದ ತಾಲೂಕು ಡಾ.ಬಿ.ಆರ್.ಅಂಬೇಡ್ಕರ್ ಪುತ್ತಳಿ ನಿರ್ಮಾಣ ಹೋರಾಟ ಸಮಿತಿ ಅಧ್ಯಕ್ಷರು ಹಾಗೂ ಪುರಸಭೆ ಸದಸ್ಯ ಡಿ.ಪ್ರೇಮಕುಮಾರ್ ಎಚ್ಚರಿಕೆ ನೀಡಿದರು. ಪ್ರತಿಭಟನೆಯ ನಂತರ ತಾಲ್ಲೂಕು ಗ್ರೇಡ್-1 ತಹಸೀಲ್ದಾರ್ ಲೋಕೇಶ್ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಗೆ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿ ಮುಸ್ಲಿಂ ಯುವಕರ ಸಂಘದ ಸದಸ್ಯರೂ ಸಹ ಬೆಂಬಲ ಸೂಚಿಸಿ ಭಾಗವಹಿಸಿದ್ದರು.
ಪ್ರತಿಭಟನೆಯಲ್ಲಿ ತಾಲೂಕು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ರಾಜಯ್ಯ, ಸಂಚಾಲಕ ಸೋಮಸುಂದರ್, ಉಪಾಧ್ಯಕ್ಷ ಡಿ.ಜಿ.ಎಸ್.ಗಂಗಾಧರ್, ತಾಲೂಕು ಛಲವಾದಿ ಮಹಾಸಭಾ ಅಧ್ಯಕ್ಷ ಊಚನಹಳ್ಳಿ ನಟರಾಜ್, ಛಲವಾದಿ ಮಹಾಸಭಾ ಜಿಲ್ಲಾ ಉಸ್ತುವಾರಿ ಮಾಂಬಳ್ಳಿ ಜಯರಾಂ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಚಾಲಕ ಲಕ್ಷ್ಮೀ ಪುರ ರಂಗಸ್ವಾಮಿ, ಡಿಎಸ್ಎಸ್ ತಾಲೂಕು ಸಂಚಾಲಕ ನಾಟನಹಳ್ಳಿ ಸೋಮರಾಜು, ಸಿಂಧಘಟ್ಟ ಜಗದೀಶ್, ಹಳೆಯೂರು ದೇವರಾಜು, ಡಿಎಸ್ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಸಂತೋಷ್ಕುಮಾರ್, ಬಂಡಿಹೊಳೆ ರಮೇಶ್, ಕತ್ತರಘಟ್ಟ ರಾಜೇಶ್, ದಲಿತ ಸೇನೆ ಜಿಲ್ಲಾಧ್ಯಕ್ಷ ಎನ್.ಜೆ.ಮಂಜು, ದಲಿತ ಸೇನೆ ತಾಲೂಕು ಅಧ್ಯಕ್ಷ ಚೌಡೇನಹಳ್ಳಿ ದೇವರಾಜು, ಗಿರಿ, ವಡ್ಡರಹಳ್ಳಿ ರಮೇಶ್, ಚನ್ನಕೃಷ್ಣ, ಮುದುಗೆರೆ ಮಹೇಂದ್ರ, ಬಂಡಿಹೊಳೆ ಕೃಷ್ಣಮೂರ್ತಿ, ಹರಿಹರಪುರ ನರಸಿಂಹ, ಐಪನಹಳ್ಳಿ ರವಿ, ಅಕ್ಕಿಹೆಬ್ಬಾಳು ಗಣೇಶ್, ಆನಂದ್, ಸೂರಿ, ಅಂಬೇಡ್ಕರ್ ಮಹಿಳಾ ಹೋರಾಟ ಸಂಘಟನೆ ಕಮಲಾಕ್ಷಿ, ಕರವೇ ಸ್ವಾಭಿಮಾನಿ ಸೇನೆಯ ಅಧ್ಯಕ್ಷ ಸಮೀರ್ ಸೇರಿದಂತೆ ಸಾವಿರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.




