ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿನ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಹೊರಟಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಕಪ್ಪು ಬಟ್ಟೆ ಕಟ್ಟಿಕೊಂಡು ಸರ್ಕಾರದ ವಿರುದ್ಧ ಕೆಲ ಘಂಟೆಗಳ ಕಾಲ ಘೋಷಣೆಗಳನ್ನು ಕೂಗಿ ಧರಣಿ ಸತ್ಯಾಗ್ರಹವನ್ನು ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ನಡೆಸಿದರು.
ಈ ಸಂದರ್ಭದಲ್ಲಿ ಸಂಸದರಾದ ರಮೇಶ ಜಿಗಜಿಣಗಿ ಮಾತನಾಡಿ, ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳ ಆವರಣದಲ್ಲಿ ಜನೌಷಧಿ ಕೇಂದ್ರಗಳ ಸೇವೆಯನ್ನು ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಡ ರೋಗಿಗಳಿಗೆ ವರದಾನವಾಗಿರುವ ಈ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವ ನಿರ್ಧಾರ ಬಡವರ ವಿರೋಧಿಯಾಗಿದೆ. ಕೂಡಲೇ ಸರ್ಕಾರ ಈ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕು ಎಂದು ಅವರು ಒತ್ತಾಯಿಸಿದರು. ರಾಜ್ಯ ಸರ್ಕಾರ ಹಾಗೂ ಆರೋಗ್ಯ ಸಚಿವರು ಮೆಡಿಕಲ್ ಮಾಫಿಯಾದವರ ಒತ್ತಡಕ್ಕೆ ಮಣಿದು ಹೀಗೆಲ್ಲ ಮಾಡುತ್ತಿದ್ದಾರೆಯೇ ಎಂದು ಜನಸಾಮಾನ್ಯರು ಮಾತನಾಡುತ್ತಿದ್ದಾರೆ. ಮಾತೆತ್ತಿದರೆ ಅಹಿಂದ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರೇ ನೀವೆ ಕುಳಿತುಕೊಂಡು ಜನೌಷಧಿ ತೆಗೆಸುವ ಮೂಲಕ ಬಡವರಿಗೆ ಅನ್ಯಾಯ ಮಾಡುತ್ತಿದ್ದೀರಿ. ಇದು ಸರಿಯಾದ ಕ್ರಮವಲ್ಲ, ತಕ್ಷಣ ಈ ಆದೇಶವನ್ನು ಹಿಂಪಡೆಯಬೇಕು ಎಂದು ಜಿಗಜಿಣಗಿ ಅವರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮಾತನಾಡಿ, ಸರ್ಕಾರಿ ಆಸ್ಪತ್ರೆಗೆ ಬರುವವರು ಬಡವರು, ಬಡವರ ಹೊಟ್ಟೆ ಮೇಲೆ ಕಲ್ಲು ಹಾಕುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮೋದಿ ಸರ್ಕಾರದ ಯೋಜನೆಯ ವಿರುದ್ದ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ, ರಾಮರಾಜ್ಯ ಮಾಡುತ್ತೇನೆ ಎಂದವರು ಇವರು ರಾವಣ ರಾಜ್ಯ ಮಾಡಿದ್ದಾರೆ, ರಾಕ್ಷಸ ರಾಜ್ಯ ಮಾಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಗುರಲಿಂಗಪ್ಪ ಅಂಗಡಿ ಮಾತನಾಡಿ, ಪ್ರಧಾನಮಂತ್ರಿ ಜನ ಔಷಧಿ ಕೇಂದ್ರವನ್ನು ಎಲ್ಲಾ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ನಡೆಸುವಂತಿಲ್ಲ ಎಂದು ಆದೇಶ ಹೊರಡಿಸಿ, ಈ ಆದೇಶಕ್ಕೆ ಸಮಜಾಯಿಸಿ ಸರಕಾರಿ ಆಸ್ಪತ್ರೆಯಲ್ಲಿ ಔಷಧಿಗಳನ್ನ ಮಾರಾಟ ಮಾಡುವಂತಿಲ್ಲ ಎನ್ನುವ ನಿಯಮದಡಿ ಕಾರಣ ಹೇಳಿ ಸಮಾಜಾಯಿಸಿ ಭಾರತ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಜನ ಔಷಧಿ ಕೇಂದ್ರ ಹೊರಹಾಕಿದ್ದಾರೆ ಎಂದರು.
ಈ ಸದರ್ಭದಲ್ಲಿ ಮಾಜಿ ಸಚಿವರಾದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಬೆಳಗಾವಿ ವಿಭಾಗದ ಪ್ರಭಾರಿಗಳಾದ ಚಂದ್ರಶೇಖರ ಕವಟಗಿ, ಬೀಜ ಮತ್ತು ಸಾವಯವ ನಿಗಮದ ಮಾಜಿ ಅಧ್ಯಕ್ಷರಾದ ವಿಜುಗೌಡ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ರಾವೂರ, ಸಾಬು ಮಾಶ್ಯಾಳ, ಮಳುಗೌಡ ಪಾಟೀಲ, ಬಿಜೆಪಿ ಮುಖಂಡರಾದ ಸುರೇಶ ಬಿರಾದಾರ, ಉಮೇಶ ಕೋಳಕೂರ, ಸಂಜಯ ಐಹೋಳ್ಳಿ, ಎಸ್.ಎ.ಪಾಟೀಲ, ವಿಜಯ ಜೋಶಿ, ರವಿಕಾಂತ ಬಗಲಿ, ಕಾಂತು ಶಿಂಧೆ, ರಾಜೇಶ ತವಸೆ, ಮಂಜುನಾಥ ಬಿಸೆ, ಪಾಪುಸಿಂಗ ರಜಪೂತ, ಚನ್ನು ಚಿನಗುಂಡಿ, ಸಿದ್ದು ಮಲ್ಲಿಕಾರ್ಜುನಮಠ, ಬಸವರಾಜ ಬೈಚಬಾಳ, ಮಹಾನಗರ ಪಾಲಿಕೆ ಸದಸ್ಯರಾದ ರಾಹಲ ಜಾಧವ, ಕಲ್ಮೇಶ ಹಿರೇಮಠ, ಸಂತೋಷ ನಿಂಬರಗಿ, ಸಂದೀಪ ಪಾಟೀಲ, ಸಂಪತ ಕೋಹಳ್ಳಿ, ಸುಮಂಗಲಾ ಕೋಟಿ, ಮಂಗಲಾ, ಛಾಯಾ ಮಸಿ, ಭಾರತಿ ಭುಯ್ಯಾರ, ಭಾರತಿ ಶಿವಣಗಿ, ಸುಶ್ಮೀತಾ ವಡಕರ ಸೇರಿದಂತೆ ಬಿಜೆಪಿಯ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.