ಪ್ರಜಾಸ್ತ್ರ ಸುದ್ದಿ
ದಾವಣಗೆರೆ(Davanagere): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಬಂಡಾಯವೆದ್ದು ಸ್ಪರ್ಧಿಸಿರುವ ಸಾದಿಕ್ ಪೈಲ್ವಾನ್ ಕಣದಲ್ಲಿ ಉಳಿದುಕೊಂಡಿದ್ದಾರೆ. ಗುರುವಾರ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ವಾಪಸ್ ಪಡೆಯಬೇಕಿತ್ತು. ಇವರ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ ನೀಡಿ ಮನವೊಲಿಸುವ ಪ್ರಯತ್ನ ಯಶಸ್ವಿಯಾಗಲಿಲ್ಲ.
ಕಾಂಗ್ರೆಸ್ ನಿಯೋಗಕ್ಕೆ ಗೋ ಬ್ಯಾಕ್ ಎಂದು ಘೋಷಣೆ ಕೂಗಲಾಯಿತು. ಶಾಮನೂರು ಶಿವಶಂಕರಪ್ಪನವರ ಕಾಲದಿಂದ ಕಾಂಗ್ರೆಸ್ ನಲ್ಲಿದ್ದು ಅವರಿಗೆ ಬೆಂಬಲ ನೀಡುತ್ತಾ ಬರಲಾಗುತ್ತಿದೆ. ಪ್ರತಿ ಬಾರಿ ಅಲ್ಪಸಂಖ್ಯಾತರಿಗೆ ಟಿಕೆಟ್ ತಪ್ಪಿಸಲಾಗುತ್ತಿದೆ. ಉಪ ಚುನಾವಣೆಯ ಸಂದರ್ಭದಲ್ಲಿಯಾದರೂ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡುವ ಬದಲು ಶಾಮನೂರು ಅವರ ಮೊಮ್ಮಗನಿಗೆ ಟಿಕೆಟ್ ನೀಡಿದ್ದರಿಂದ ಸಾದಿಕ್ ಪೈಲ್ವಾನ್ ಬಂಡಾಯವೆದಿದ್ದು, ನಾಮಪತ್ರ ಹಿಂದಕ್ಕೆ ಪಡೆದಿಲ್ಲ. ಹೀಗಾಗಿ ಇದೀಗ ಕಾಂಗ್ರೆಸ್ ಟೆನ್ಷನ್ ಶುರುವಾಗಿದೆ.
ಈ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿದ ಸಾದಿಕ್ ಪೈಲ್ವಾನ್, ಪದೆಪದೆ ಅಲ್ಪಸಂಖ್ಯಾತರಿಗೆ ಅನ್ಯಾಯವಾಗುತ್ತಿದೆ. ಸಮಾಜದ ಜನರು ನನ್ನ ಬೆನ್ನಿಗೆ ಇದ್ದಾರೆ. ನಾನು ಸೋತರೆ ಸಮಾಜ ಸೋತಂತೆ. ಸಮಾಜ ಸೋತರೆ ನಾನು ಸೋತಂತೆ. ಹೀಗಾಗಿ ಚುನಾವಣೆಯಿಂದ ಹಿಂದೆ ಸರಿಯದೆ ಸ್ಪರ್ಧಿಸುತ್ತಿದ್ದೇನೆ ಎಂದರು.




