ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕನ್ನಡದ ಖ್ಯಾತ ಕವಿ, ಕಾದಂಬರಿಕಾರ, ನಾಟಕಕಾರ ಎಚ್.ಎಸ್ ವೆಂಕಟೇಶಮೂರ್ತಿ(80) ಅವರು ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಮುಂಜಾನೆ 7 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ. ಇವರಿಗೆ ನಾಲ್ವರು ಗಂಡು ಮಕ್ಕಳು ಇದ್ದಾರೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದರು. ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಪಕರಾಗಿ 30 ವರ್ಷ ಸೇವೆ ಸಲ್ಲಿಸಿ ಅಲ್ಲಿಯೇ ನಿವೃತ್ತಿಯಾದರು. ಕವಿತೆ, ಕಾದಂಬರಿ, ನಾಟಕ ಸೇರಿದಂತೆ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ತೊಡಗಿಸಿಕೊಂಡಿದ್ದರು. ಇವರು ಹಲವು ಭಾವಗೀತೆಗಳು ಧ್ವನಿಸುರುಳಿ ಮೂಲಕ ಮನೆ ಮಾತಾಗಿವೆ.
ಇವರಿಗೆ ರಾಜ್ಯದ ಹಲವು ಪ್ರತಿಷ್ಠಿತ ಪ್ರಶಸ್ತಿಗಳು ಸಂದಿವೆ. ಇವರ ಕಥೆಗಳು ಸಿನಿಮಾ ಸಹ ಆಗಿವೆ. ಕಲಬುರಗಿಯಲ್ಲಿ ನಡೆದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು. ಇವರ ನಿಧನಕ್ಕೆ ಸಾಹಿತ್ಯ ವಲಯದವರು, ಶಿಷ್ಯರು, ಅಭಿಮಾನಿಗಳು, ರಾಜಕೀಯ ನಾಯಕರು ಸೇರಿದಂತೆ ಬಂಧು ಬಳಗದವರು ಸಂತಾಪ ಸೂಚಿಸಿದ್ದಾರೆ.