ಪ್ರಜಾಸ್ತ್ರ ಸುದ್ದಿ
ಚಿಕ್ಕನಾಯಕನಹಳ್ಳಿ(Chikkanayakanahalli): ಇಸ್ಪೀಟ್ ಆಟ ಆಡುತ್ತಿದ್ದವರನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಬಂದವರಲ್ಲಿ ಕಾಂತರಾಜು(50) ಎಂಬುವರು ಮೃತಪಟ್ಟಿದ್ದಾರೆ. ಇದಕ್ಕೆ ಪೊಲೀಸರೆ ಕಾರಣವೆಂದು ತಾಲೂಕಿನ ಹುಳಿಯಾರು ಪೊಲೀಸ್ ಠಾಣೆ ಎದುರು ಗುರುವಾರ ರಾತ್ರಿ ಯಳನಡು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಯುಗಾದಿ ಹಬ್ಬದ ಸಂಭ್ರಮದಲ್ಲಿ ಯಳನಡು ಗ್ರಾಮದಲ್ಲಿ ಇಸ್ಪೀಟ್ ಆಡುತ್ತಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಐವರನ್ನು ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಇದರಲ್ಲಿ ಕಾಂತರಾಜು ಸಹ ಇದ್ದ. ವಿಚಾರಣೆ ಬಳಿಕ ಹೊರ ಬಂದ ಕಾಂತರಾಜು ತೀವ್ರ ಅಸ್ವಸ್ಥನಾಗಿ ಠಾಣೆ ಮುಂದೆಯೇ ಕುಸಿದು ಬಿದ್ದಿದ್ದಾನೆ. ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ಪೊಲೀಸರು ಹೊಡೆದಿರುವುದರಿಂದಲೇ ಆತ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಠಾಣೆ ಮುಂದೆ ಶವ ಇಟ್ಟು ಗುರುವಾರ ರಾತ್ರಿ ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಸಚಿವ ಜೆ.ಸಿ ಮಾಧುಸ್ವಾಮಿ, ಶಾಸಕ ಕೆ.ಎಸ್ ಕಿರಣ್ ಕುಮಾರ್, ಎಸ್ಪಿ ಕೆ.ವಿ ಅಶೋಕ್ ಠಾಣೆಗೆ ಭೇಟಿ ನೀಡಿದರು. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ.




