ಪ್ರಜಾಸ್ತ್ರ ಸುದ್ದಿ
ಚಿತ್ರದುರ್ಗ(Chitradurga): ತಾಯಿ, ಮಗಳು ಆತ್ಮಹತ್ಯೆ ಮಾಡಿಕೊಂಡು ಸುಮಾರು ಒಂದು ವಾರದ ಬಳಿಕ ಪ್ರಕರಣ ಬೆಳಕಿಗೆ ಬಂದ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದಲ್ಲಿ ನಡೆದಿದೆ. ಪುಷ್ಪ(52) ಹಾಗೂ ಮಗಳು ಲಾವಣ್ಯ(16) ಮೃತು ದುರ್ದೈವಿಗಳು. ಮೃತದೇಹಗಳು ಕೊಳೆತು ವಾಸನೆ ಬಂದ ಮೇಲೆ ಪ್ರಕರಣ ಬೆಳಕಿಗೆ ಬಂದಿದೆ. ದಿನದಿಂದ ದಿನಕ್ಕೆ ಇಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ನೆರೆಹೊರೆಯವರು ದಿಢೀರ್ ಎಂದು ಕಣ್ಮರೆಯಾಗುತ್ತಿರುವ ಬಗ್ಗೆ ಯಾರೂ ಗಮನ ಹರಿಸದೆ ಹೋಗುತ್ತಿರುವುದು ನಿಜಕ್ಕೂ ಅಚ್ಚರಿಯಾಗುತ್ತಿದೆ.
ಪುಷ್ಪ ಪತಿ ಬಸವರಾಜಪ್ಪ ಕಳೆದ ಮೂರು ತಿಂಗಳ ಹಿಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದರಿಂದಾಗಿ ಇವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ. ಇದೇ ದುಃಖದಲ್ಲಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಕಪಕ್ಕದ ಮನೆಯವರು ಒಂದೆರಡು ದಿನ ಕಾಣಲಿಲ್ಲವೆಂದರೆ ವಿಚಾರಿಸದೆ ಹೋದರೆ ಇಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಲೇ ಇರುತ್ತವೆ. ಖ್ಯಾತ ನಿರ್ದೇಶಕ ಗುರುಪ್ರಸಾದ್ ಸಾವು ಎಲ್ಲರ ಕಣ್ಮುಂದೆ ಇದೆ.