ಪ್ರಜಾಸ್ತ್ರ ಸುದ್ದಿ
ಆಲಮೇಲ(Alamela): ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ವಿವಿಧ ಇಲಾಖೆಗಳಿಗೆ ಬುಧವಾರ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಟಣದ ಕಡಣಿ ರಸ್ತೆಯಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಮಕ್ಕಳ ಕಲಿಕಾ ಗುಣಮಟ್ಟ ಹಾಗೂ ಊಟದ ವ್ಯವಸ್ಥೆ ಪರಿಶೀಲಿಸಿದರು. ಕೇಂದ್ರದಲ್ಲಿ ಪ್ರತ್ಯೇಕ ಅಡುಗೆ ಕೊಠಡಿ ನಿರ್ಮಾಣಕ್ಕೆ ಸೂಚನೆ ನೀಡಿದರು.
ಇದಕ್ಕೂ ಮೊದಲು ತಹಸೀಲ್ದಾರ್ ಕಚೇರಿಗೆ ಭೇಟಿ ನೀಡಿ, ಕಂದಾಯ ಇಲಾಖೆಯ ಪ್ರಗತಿ ಪರಿಶೀಲಿಸಿದರು. ಕಂದಾಯ ಗ್ರಾಮ, ಈ ಪೌತಿ, ದರಕಾಸ್ತ್ ಫೋಡಿ, ಭೂಸುರಕ್ಷಾ ಯೋಜನೆ ಇತರೆ ವಿಷಯಗಳ ಬಗ್ಗೆ ಚರ್ಚಿಸಿದರು. ಬಳಿಕ ತಹಸೀಲ್ದಾರ್ ಕಚೇರಿ ಪ್ರತಿ ಕೊಠಡಿಗಳಿಗೆ ತೆರಳಿ ಪರಿಶೀಲಿಸಿದರು. ಎಲ್ಲ ಅಧಿಕಾರಿ, ಸಿಬ್ಬಂದಿ ಕಾರ್ಯವೈಖರಿ ಪರಿಶೀಲಿಸಿ, ಸಾರ್ವಜನಿಕ ಅರ್ಜಿಗಳನ್ನು, ಕುಂದು ಕೊರತೆಗಳನ್ನು ತಕ್ಷಣ ವಿಲೇವಾರಿಗೊಳಿಸಲು ಸೂಚಿಸಿದರು.
ಸಮುದಾಐ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ, ಆಲಮೇಲ ಪಟ್ಟಣದ ಜನತೆಗೆ ಕುಡಿಯುವ ನೀರು ಪೂರೈಸಲು ಜಲಧಾರೆ ಯೋಜನೆ ಅನುಷ್ಠಾನಗೊಳಿಸಲು ಜಲಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು. ಡಾ.ಅಂಬೇಡ್ಕರ್ ವೃತ್ತದಲ್ಲಿರುವ ಅತಿಕ್ರಮಣ ಜಾಗ ತೆರುವುಗೊಳಿಸಲು ಒತ್ತಾಯಿಸಿ ಸಾರ್ವಜನಿಕರು ನೀಡಿದ ಮನವಿ ಸ್ವೀಕರಿಸಿದರು. ಆಲಮೇಲ ಪಟ್ಟಣದ ದ್ರಾಕ್ಷಿ ಬೆಳೆಗಾರರ ಸಂಘದ ಪದಾಧಿಕಾರಿಗಳು ನೀಡಿದ ಮನವಿ ಸ್ವೀಕರಿಸಿದರು. ಈ ವೇಳೆ ತಹಶೀಲ್ದಾರ್ ಎಮ್.ಎಸ್. ಅರಕೇರಿ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಸುರೇಶ ನಾಯಕ ಹಾಗೂ ಇತರೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.




