ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಬುಧವಾರ ನಗರದ ಅಂಬೇಡ್ಕರ್ ಭವನ ಡಾ.ಬಿ.ಅರ್ ಅಂಬೇಡ್ಕರ ಕ್ರೀಡಾಂಗಣ, ನಗರದ ಜಿಲ್ಲಾ ಪಂಚಾಯತಿಯ ಹತ್ತಿರವಿರುವ ಈಜುಕೊಳ ಹಾಗೂ ಒಳಾಗಂಣ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಂಬೇಡ್ಕರ್ ಭವನದ ದುರಸ್ತಿ ಹಾಗೂ ನವೀಕರಣ ಕಾಮಗಾರಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಅಗತ್ಯ ದುರಸ್ತಿ ಕಾಮಗಾರಿ ಹಾಗೂ ಮುಖ್ಯ ರಸ್ತೆಯಿಂದ ಭವನಕ್ಕೆ ಕಲ್ಪಿಸುವ ರಸ್ತೆ ಅಗಲೀಕರಣ ಕುರಿತಾದ ಕಾಮಗಾರಿಯ ಅಂದಾಜು ಪತ್ರಿಕೆಯನ್ನು ಸಿದ್ದಪಡಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಡಾ.ಬಿ.ಆರ್ ಅಂಬೇಡ್ಕರ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಅವರು, ಅಭ್ಯಾಸಕ್ಕೆ ಆಗಮಿಸುವ ಕ್ರೀಡಾಪಟುಗಳ ಸುರಕ್ಷತೆಗೆ ಆದ್ಯತೆ ನೀಡಬೇಕು. ಕುಡಿಯುವ ನೀರಿನ ವ್ಯವಸ್ಥೆ, ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಸ್ವಚ್ಚತೆಗೆ ಆಧ್ಯತೆ ನೀಡಬೇಕು. ಕ್ರೀಡಾಂಗಣವನ್ನು ಆಕರ್ಷಿಣೀಯವಾಗಿಸುವ ನಿಟ್ಟಿನಲ್ಲಿ ಬಣ್ಣ ಹಾಗೂ ಗೋಡೆ ಚಿತ್ರ ಬಿಡಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತಿ ಹತ್ತಿರವಿರುವ ಈಜುಕೊಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನೀರಿನ ಸಮಸ್ಯೆ ಬಾರದಿರುವಂತೆ ಸಮರ್ಪಕ ನೀರು ಪೂರೈಸಬೇಕು ಎಂದು ಜಲಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು. ಒಳಾಂಗಣ ಕ್ರೀಡಾಂಗಣಕ್ಕೆ ಭೇಟಿ ನೀಡಿ ಅಗತ್ಯವಿರುವ ಮೂಲಭೂತ ಸೌಲಭ್ಯ ಹಾಗೂ ಸಮರ್ಪಕ ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಹಾಗೂ ಒಳಾಂಗಣ ಕ್ರೀಡಾಂಗಣದ ಸ್ವಚ್ಚತೆಗೆ ಕ್ರಮವಹಿಸಿ. ವಿಳಂಬ ಮಾಡದೆ ಅವಶ್ಯಕ ದುರಸ್ತಿ ಕಾಮಗಾರಿಗಳನ್ನು ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಜೆ.ಇಂಡಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ್ ದೈವಾಡಿ ಸೇರಿದಂತೆ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.