ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaluru): ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಾಲ್ಕು ಘಟಕಗಳ ಸಾರಿಗೆ ನೌಕರರು ಮಂಗಳವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು, ಸೋಮವಾರ ವಿಚಾರಣೆ ನಡೆಯಿತು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಗೈರು ಹಿನ್ನಲೆಯಲ್ಲಿ ಎಂ.ಜಿ.ಎಸ್ ಕಮಲ್ ಹಾಗೂ ಕೆ.ಎಸ್ ಮುದ್ಗಲ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಮಂಗಳವಾರ ಮುಷ್ಕರ ನಡೆಸದಂತೆ ಸೂಚನೆ ನೀಡಿದೆ.
ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತು ಅಡ್ವೋಕೇಟ್ ಜನರಲ್ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲು ನೋಡಿದರು. ಇದಕ್ಕೆ ಸಾರಿಗೆ ನಿಗಮಗಳ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಆಗಸ್ಟ್ 5ರಂದು ಮುಷ್ಕರ ನಡೆಸುತ್ತೇವೆ ಎಂದು ಒಂದು ತಿಂಗಳ ಮೊದಲೇ ತಿಳಿಸಿದ್ದೇವೆ ಎಂದರು. ಸಾರಿಗೆ ನೌಕರರ ಅರ್ಜಿಯಲ್ಲೇ ವ್ಯತ್ಯಾಸವಿದೆ. ಮುಖ್ಯಮಂತ್ರಿಯೊಂದಿಗೆ ನಡೆಸಿದ ಮಾತುಕತೆ ವಿವರ, ಇದುವರೆಗೂ ತೆಗೆದುಕೊಂಡು ಕ್ರಮಗಳ ವಿವರ ನೀಡುವಂತೆ ಸೂಚಿಸಿ ಮಂಗಳವಾರಕ್ಕೆ ಮುಂದೂಡಲಾಗಿದೆ.
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಾರಿಗೆ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತಸುಬ್ಬರಾವ್, ಸಾರಿಗೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಎರಡು ಗಂಟೆಗಳ ಕಾಲ ನಡೆಸಿದ ಸಭೆ ವಿಫಲವಾಗಿದೆ. ನೌಕರರ ಬೇಡಿಕೆಗಳನ್ನು ಈಡೇರಿಸಬೇಕಾದರೆ ಕನಿಷ್ಠ 2,200 ಕೋಟಿ ರೂಪಾಯಿ ಬೇಕು. ಇದಕ್ಕೆ ಬೊಕ್ಕಸಕ್ಕೆ ಹೊರೆಯಾಗುತ್ತೆ. ಈಗ ಎಷ್ಟು ಸಾಧ್ಯವೋ ಅಷ್ಟು ಈಡೇರಿಸುತ್ತೇವೆ. 2027ರಲ್ಲಿ ಪೂರ್ಣ ಪ್ರಮಾಣದಲ್ಲಿ ಈಡೇರಿಸುತ್ತೇವೆ ಎನ್ನುವ ಭರವಸೆ ನೀಡಲಾಗಿದೆ.