ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಕರ್ನಾಟಕ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿದೆ. ಕಾಂಗ್ರೆಸ್ ಪಕ್ಷದ ನಾಯಕರ ಹೇಳಿಕೆಗಳು ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿವೆ. ಇದರ ನಡುವೆ ಇಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭೇಟಿಯಾಗಿದ್ದರು.
ರಾಹುಲ್ ಗಾಂಧಿ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಸ್ಸಾಂ ಹಾಗೂ ಬೇರೆ ಬೇರೆ ರಾಜ್ಯಗಳ ಚುನಾವಣೆ ಕುರಿತು ಚರ್ಚಿಸಲಾಗಿದೆ. ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನಮ್ಮ ವರದಿಯ ಬಗ್ಗೆ ತಿಳಿಸಲಾಗಿದೆ. ಒಳಗಡೆ ಯಾರ ಜೊತೆ ಏನು ಮಾತನಾಡಿದ್ದೇವೆ ಅನ್ನೋದನ್ನು ಬೀದಿಯಲ್ಲಿ ನಿಂತು ರಾಜಕಾರಣ ಮಾಡಲು ಆಗುವುದಿಲ್ಲ. ಕಾಲ ಎಲ್ಲದಕ್ಕೂ ಉತ್ತರ ಕೊಡುತ್ತೆ ಎನ್ನುವ ಮೂಲಕ ಸಿಎಂ ಸ್ಥಾನದ ವಿಚಾರದ ಬಗ್ಗೆಯೂ ಚರ್ಚೆ ನಡೆದಿರಬಹುದು ಅನ್ನೋ ಮಾತುಗಳು ಕೇಳಿ ಬರುತ್ತಿವೆ.




